ರಾಜಕೀಯ ನಿವೃತ್ತಿ ಮಾತನಾಡಿದ ವಿ. ಶ್ರೀನಿವಾಸ ಪ್ರಸಾದ್!
ಮೈಸೂರು, ಫೆಬ್ರವರಿ 26: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಕರ್ನಾಟಕದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ರಾಜಕೀಯದಿಂದ ನಿವೃತ್ತಿ ಪಡೆಯುವ ಮನಸ್ಸು ಮಾಡಿದ್ದಾರೆ.
ಶುಕ್ರವಾರ ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಅವರು ಈ ಕುರಿತು ಮಾತನಾಡಿದರು. "ಆರೋಗ್ಯ ಹದಗೆಟ್ಟು ಕೆಲಸ ಮಾಡಲು ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಹೇಳಿದರು.
"ಚುನಾವಣಾ ರಾಜಕೀಯ ಸಾಕು ಎಂದು ನಿರ್ಧರಿಸಿ ಮನೆಯಲ್ಲಿ ಉಳಿದಿದ್ದೆ. ಪಕ್ಷದ ನಾಯಕರು ಒತ್ತಡ ಹೇರಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು" ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದರು.

"ತಿ.ನರಸೀಪುರ ತಾಲೂಕಿನಲ್ಲಿ ಪಕ್ಷದ ಕರಪತ್ರ ಹಂಚುವುದಕ್ಕೂ ಕಾರ್ಯಕರ್ತರು ಇರದ ವಾತಾವರಣ ಇತ್ತು. ಇಷ್ಟು ವರ್ಷಗಳ ಕಾಲ ಜನರ ಪ್ರೀತಿ, ವಿಶ್ವಾಸಗಳಿಸಿಕೊಂಡು ಬಂದಿದ್ದರಿಂದ ಗೆಲ್ಲುವುದಕ್ಕೆ ಸಾಧ್ಯವಾಯಿತು. ಚುನಾವಣೆ ನಡೆದು ಎರಡು ವರ್ಷ ಕಳೆಯುತ್ತಿದೆ. ಇನ್ನು ಮೂರು ವರ್ಷಗಳ ಕಾಲ ಅವಧಿಯಿದೆ. ಒಂದು ವೇಳೆ ಆರೋಗ್ಯ ಹದಗೆಟ್ಟರೆ ಸ್ವಯಂ ನಿವೃತ್ತಿ ಪಡೆಯುವೆ" ಎಂದರು.
ವಿ. ಶ್ರೀನಿವಾಸ ಪ್ರಸಾದ್ 2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು. ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಪಕ್ಷದ ವಿರುದ್ಧವೇ ಬಂಡಾಯವೆದ್ದು ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್ನ ಆರ್. ಧ್ರುವನಾರಾಯಣ್ ವಿರುದ್ಧ ಗೆಲುವು ಸಾಧಿಸಿದ್ದರು.












Click it and Unblock the Notifications