ಮೈಸೂರಿನಲ್ಲಿ ಶುರುವಾಯ್ತು ಮನೆ ಮನೆಗೆ ಹಣ್ಣು, ತರಕಾರಿ ಪೂರೈಕೆ
ಮೈಸೂರು, ಏಪ್ರಿಲ್ 01: ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಎಲ್ಲಾ ವಾರ್ಡ್ ಗಳು ಹಾಗೂ ಬಡಾವಣೆಗಳ ಮನೆ ಮನೆಗೆ ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಯಾರೂ ಮನೆಯಿಂದ ಹೊರಗೆ ಬರಬಾರದು. ಅದರಂತೆ ಯಾರೊಬ್ಬರೂ ಹಸಿವಿನಿಂದ ಇರಬಾರದು. ಹಾಗಾಗಿ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಎಲ್ಲರ ಮನೆ ಮನೆಗೂ ತಲುಪಿಸುವಂತೆ ಈ ವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದರು.
ಜನರು ತಮ್ಮ ಮನೆಯ ಮುಂದೆ ಬಂದಂತಹ ವಾಹನದಲ್ಲಿ ತಮಗೆ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಖರೀದಿಸಬೇಕು. ವ್ಯಾಪಾರಸ್ಥರು ಕೂಡ ಅಗತ್ಯಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಬಾರದು ಎಂದು ಸೂಚಿಸಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೇಯರ್ ತಸ್ನೀಂ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಇತರರು ಹಾಜರಿದ್ದರು.












Click it and Unblock the Notifications