ಚಾಮುಂಡಿ ಬೆಟ್ಟ ಉಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಎಸ್.ಎಲ್. ಭೈರಪ್ಪ
ಮೈಸೂರು, ನವೆಂಬರ್ 23: ನಾಡಿನ ಅಧಿದೇವತೆ ಚಾಮುಂಡೇಶ್ವರಿ ನೆಲೆಸಿರುವ ಚಾಮುಂಡಿ ಬೆಟ್ಟವನ್ನು ಉಳಿಸಿ ಎಂದು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಯನ್ನು ಎಸ್.ಎಲ್. ಭೈರಪ್ಪ ವಿರೋಧಿಸಿದ್ದಾರೆ.
ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಿಂದ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೊಂದರೆಯಾಗುತ್ತದೆ. ಚಾಮುಂಡಿ ಬೆಟ್ಟವನ್ನು ಕಾಂಕ್ರೀಟ್ ಕಾಡು ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಬಾರದು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಹೋಗುವಂತ ಖಾಸಗಿ ವಾಹನಗಳಿಗೆ ನಿರ್ಬಂಧ ಹಾಕಬೇಕು. ಗಣ್ಯ ವ್ಯಕ್ತಿಗಳ ವಾಹನ ಸೇರಿದಂತೆ ಎಲ್ಲಾ ವಾಹನಗಳಿಗೂ ನಿರ್ಬಂಧ ವಿಧಿಸಬೇಕು. ಸರ್ಕಾರದಿಂದಲೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ಗಳನ್ನು ಬಿಡಬೇಕು.
ಚಾಮುಂಡಿ ಬೆಟ್ಟದಲ್ಲಿ ವಾಸ ಇರುವ 4 ಸಾವಿರ ಜನರಿಗೆ ನಗರದಲ್ಲಿ ಸ್ಥಳಾವಕಾಶ ಮಾಡಿಕೊಡಬೇಕು. ದೇವಸ್ಥಾನದ ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿಗೆ ಮಾತ್ರ ಬೆಟ್ಟದಲ್ಲಿ ಉಳಿಯಲು ಅವಕಾಶ ನೀಡಬೇಕು ಎಂದು ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಮೈಸೂರಿನ ಜನ ಸೇರಿದಂತೆ ಅನೇಕರು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಹಾಗೂ ರಸ್ತೆಗಳು ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ.
ಸರ್ಕಾರದ ನಡೆಗೆ ಇತಿಹಾಸ ತಜ್ಞರು ಮತ್ತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ. ಸದ್ಯ ಈ ಬಗ್ಗೆ ಸಾಹಿತಿ ಎಸ್.ಎಲ್. ಬೈರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.