ಇಂದು ಮೈಸೂರಿನತ್ತ ರಾಷ್ಟ್ರಪತಿಗಳ ಭೇಟಿ; ಪ್ರವಾಸಿಗರಿಗೆ ನಿರ್ಬಂಧ
ಮೈಸೂರು, ಅಕ್ಟೋಬರ್ 10: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರಮನೆಯ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸುವ ಹಿನ್ನಲೆಯಲ್ಲಿ ಮಧ್ಯಾಹ್ನ 2 ಗಂಟೆ ನಂತರ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಅರಮನೆ ಪ್ರವೇಶವನ್ನು ನಿಷೇಧಿಸಲಾಗಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ 2 ದಿನಗಳ ಮೈಸೂರು ಪ್ರವಾಸ ಇಂದಿನಿಂದ ಆರಂಭವಾಗಲಿದ್ದು, ಇಂದು ಸಂಜೆ ಮೈಸೂರಿನ ಮಂಟಗಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಸಂಜೆ ಅರಮನೆಯಲ್ಲಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಶತಮಾನೋತ್ಸವ ಪ್ರಯುಕ್ತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಹಾಗೂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ 11 ಗಂಟೆಗೆ ಜೆಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಬೆಳಿಗ್ಗೆ 8.30ಕ್ಕೆ ಭೇಟಿ ನೀಡಲಿದ್ದು, ಬೆಳಿಗ್ಗೆ 8.30ರಿಂದ 10.30ರವರೆಗೆ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಾಳೆ ಬೆಳಿಗ್ಗೆ ರಾಷ್ಟ್ರಪತಿಗಳು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 9.45ರಿಂದ 11.45ರವರೆಗೆ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

ಜೆಎಸ್ಎಸ್ ಶಂಕುಸ್ಥಾಪನಾ ಕಾರ್ಯಕ್ರಮವು ಶುಕ್ರವಾರ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಮಾತ್ರ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ದೇವಾಲಯದ ದರ್ಶನ ಹಾಗೂ ಅರಮನೆ ಕಾರ್ಯಕ್ರಮಗಳಿಗೆ ದೂರದರ್ಶನ ಹಾಗೂ ಆಕಾಶವಾಣಿ ಹೊರತು ಪಡಿಸಿ ಉಳಿದ ಮಾಧ್ಯಮದವರಿಗೆ ಪ್ರವೇಶ ನೀಡಿಲ್ಲ.












Click it and Unblock the Notifications