ಮೈಸೂರಿನಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೂ ನಮ್ಮ ಬೆಂಬಲವಿದೆ:ಜಿಟಿಡಿ
ಮೈಸೂರು, ಮಾರ್ಚ್ 11: 2 - 3 ದಿನಗಳಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಅಂತಿಮಗೊಳ್ಳಲಿದೆ. ನಮಗೆ ಇವರೇ ನಿಲ್ಲಬೇಕೆಂಬ ಹಠವಿಲ್ಲ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ನಾವು ಬೆಂಬಲಿಸುತ್ತೇವೆ ಎಂದು ಸಚಿವ ಜಿ.ಟಿ.ದೇವೇಗೌಡ ಘೋಷಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯನ್ನು ನಮ್ಮ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಒಟ್ಟಾಗಿ ಎದುರಿಸಲಿದೆ. ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೈಸೂರಿನಿಂದಲೇ ಸ್ಪರ್ಧಿಸಬೇಕು ಎಂದು ನಾವು ಮನವಿ ಮಾಡಿದ್ದು ನಿಜ. ಆದರೆ ನಮ್ಮಲ್ಲಿ ಒಳಜಗಳವಿಲ್ಲ. ಅವರ ಬದಲಾಗಿ ನಮಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿಂತರೂ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ ಎಂದರು.
ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಜೊತೆಯಾಗಿಯೇ ಚುನಾವಣೆಯನ್ನು ಎದುರಿಸಲಿದೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಜಿಡಿಡಿ ತಿಳಿಸಿದರು.

ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟ ರಾಜು ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮಂಡ್ಯದಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತಿದ್ದ ಕಾಂಗ್ರೆಸ್ ನಮ್ಮೊಂದಿಗೆ ಮೈತ್ರಿಯಾಗಿರುವುದರಿಂದ ನಿಖಿಲ್ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.











Click it and Unblock the Notifications