MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಹೋರಾಟ; ಎಚ್ಡಿ ಕುಮಾರಸ್ವಾಮಿ
ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ - ಜೆಡಿಎಸ್ ನಾಯಕರು ಮಾಡಿದ್ದ ಮೈಸೂರು ಚಲೋ ಪಾದಯಾತ್ರೆಗೆ ಇಂದು ತೆರೆ ಬಿದ್ದಿದೆ. ಮೈಸೂರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಬಿಜೆಪಿ-ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದರು. ಲಕ್ಷಾಂತರ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಮೈಸೂರು ಚಲೋ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದೇವೆಯೇ ಹೊರತೂ ಕಾಂಗ್ರೆಸ್ ಸರ್ಕಾರದ ರಾಜೀನಾಮೆ ಅಲ್ಲ. ನಮ್ಮ ಹೋರಾಟ ಮುಖ್ಯಮಂತ್ರಿ ವಿರುದ್ಧ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟರು. ಈ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಹೋರಾಟ ಮಾಡುತ್ತಿದ್ದಾರೆ ಎನ್ನುವ ಕಾಂಗ್ರೆಸ್ ನಾಯಕರ ಆರೋಪಕ್ಕೆ ಎಚ್ಡಿಕೆ ಸ್ಪಷ್ಟನೆ ಕೊಟ್ಟರು.

ರಾಜ್ಯದಲ್ಲಿ ಜನರು ಮೈತ್ರಿ ಒಪ್ಪಿಕೊಂಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಹೋದರರಂತೆ ಇದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಮುಖಂಡರು ತಳಮಳಗೊಂಡಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಮನೆಗೆ ಕಳುಹಿಸುವ ತನಕ ವಿಶ್ರಮಿಸುವುದಿಲ್ಲ ಎಂದರು.
ಈ ಭ್ರಷ್ಟ ಸರ್ಕಾರಕ್ಕೆ ಕಾಂಗ್ರೆಸ್ನವರೇ ಒಂದು ಗತಿ ತರುತ್ತಾರೆ. ಸಿದ್ದರಾಮಯ್ಯ ಬಂಡೆಯನ್ನು ನಂಬಿಕೊಂಡಿದ್ದಲ್ಲಿ ಅವರ ಪರಿಸ್ಥಿತಿ ಏನಾಗುತ್ತದೆ ಎನ್ನುವುದನ್ನು ನೋಡುತ್ತಿರಿ. ನನ್ನ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಹಾಕಿದರೆ ಸರ್ವನಾಶವಾಗುವ ಕಾಲ ದೂರವಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಆಡಳಿತದಿಂದ ಜನರಿಗೆ ನಿರಾಸೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ನನ್ನ ಕೊನೆ ಉಸಿರು ಇರುವ ತನಕವೂ ನನ್ನ ಹೋರಾಟ ಮುಂದುವರಿಯುತ್ತದೆ. ಇಂತಹ ಭ್ರಷ್ಟ ರಾಜ್ಯ ಸರಕಾರವನ್ನು ಇತಿಹಾಸದಲ್ಲಿ ನಾನು ನೋಡಲಿಲ್ಲ. ಕಾಂಗ್ರೆಸ್ ಆಡಳಿತದಿಂದ ಜನರು ಭ್ರಮ ನಿರಸನಗೊಂಡಿದ್ದಾರೆ. ಮುಂದೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications