ಮೋದಿ ಸಾಧನೆ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ: ರಾಮದಾಸ್
ಮೈಸೂರು, ಮಾರ್ಚ್ 24:ಸಂಸದರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯನ್ನು ಜನಸಾಮಾನ್ಯರ ಮುಂದಿಟ್ಟುಕೊಂಡು ಬಿಜೆಪಿ ಈ ಬಾರಿಯ ಚುನಾವಣೆಯನ್ನು ಎದುರಿಸಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದರು.
ಅಭಿವೃದ್ಧಿಯ ಬಗ್ಗೆ ಚರ್ಚೆಗೆ ಬನ್ನಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಮೈಸೂರಿನಲ್ಲಿ ಕಳೆದ ಐದು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದ ಚರ್ಚೆಗೆ ನಾವು ಸಿದ್ಧ ಎಂದು ಹೇಳಿ ಅವರಿಗೆ ಒಂದು ಪತ್ರ ಬರೆದಿದ್ದೇವೆ. ಅದಕ್ಕೆ ಇದುವರೆಗೂ ಉತ್ತರಿಸಿಲ್ಲ ಎಂದರು.

ಅಭಿವೃದ್ಧಿಯ ಆಧಾರದಲ್ಲಿ ಮತ ಕೇಳಿ ಎಂಬ ಅವರ ಸವಾಲನ್ನು ಸ್ವೀಕರಿಸಿದ್ದೇವೆ. ಈ ಬಾರಿಯ ಚುನಾವಣೆ ಧರ್ಮ, ಜಾತಿ ವ್ಯವಸ್ಥೆಯನ್ನು ಮೀರಿ ನಡೆಯಲಿದೆ. ಅಭಿವೃದ್ಧಿಯ ಆಧಾರದಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ರಾಮದಾಸ್ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ
ಪ್ರತಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯು ಮೈಸೂರಿನಲ್ಲಿ ತನ್ನ ಶಕ್ತಿ ವೃದ್ಧಿಸಿಕೊಳ್ಳುತ್ತಾ ಬಂದಿದೆ ಎಂದ ರಾಮದಾಸ್, 2014ರಲ್ಲಿ ಪ್ರತಾಪಸಿಂಹ ಅವರು ಶೇ 43ರಷ್ಟು ಮತಗಳನ್ನು ಪಡೆದು ಗೆದ್ದಿದ್ದರು ಎಂದು ತಿಳಿಸಿದರು.
ಇಷ್ಟು ವರ್ಷ ಈ ಕ್ಷೇತ್ರದಲ್ಲಿ 'ತ್ರಿಕೋನ ಸ್ಪರ್ಧೆ' ನಡೆಯುತ್ತಿತ್ತು. ಈ ಬಾರಿ ಮೈತ್ರಿ ಅಭ್ಯರ್ಥಿಯ ವಿರುದ್ಧ ನೇರವಾಗಿ ಸ್ಪರ್ಧಿಸಬೇಕಿದೆ. ಆದ್ದರಿಂದ ಗೆಲುವು ಪಡೆಯಲು ಶೇ 51ಕ್ಕೂ ಅಧಿಕ ಮತಗಳು ಬೇಕು. ಅಷ್ಟು ಮತಗಳನ್ನು ಪಡೆಯುವ ವಿಶ್ವಾಸವಿದೆ ಎಂದರು.
ಪ್ರತಾಪಸಿಂಹ ಅವರು ಸೋಮವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಹಿರಂಗ ಸಭೆ ನಡೆಯಲಿದ್ದು, ಆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಶೋಭಾಯಾತ್ರೆ ನಡೆಯಲಿದೆ. ಮಧ್ಯಾಹ್ನ 12.30ರ ವೇಳೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮುಖಂಡರಾದ ಆರ್.ಅಶೋಕ್, ಶ್ರೀರಾಮುಲು ಅವರು ಪಾಲ್ಗೊಳ್ಳಲಿದ್ದಾರೆ.












Click it and Unblock the Notifications