ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ ಭವಿಷ್ಯ
ಮೈಸೂರು, ಡಿಸೆಂಬರ್, 10: ಗುಜರಾತ್ ಚುನಾವಣೆ ನಂತರ ಸಹಜವಾಗಿಯೇ ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆ ಬಗ್ಗೆಯೂ ಹೆಚ್ಚು ಚರ್ಚೆ ಆಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂಘಟನೆ ದೃಷ್ಟಿಯಿಂದ ಎಲ್ಲಾ ತಯಾರಿ ನಡೆಸಿದ್ದೇವೆ. ಕಳೆದ ಹಲವು ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಆದರೆ ಈ ಬಾರಿ ಭಾರತೀಯ ಜನತಾ ಪಕ್ಷಕ್ಕೆ ಬಹಳ ದೊಡ್ಡ ಸಂಖ್ಯೆಯಲ್ಲಿ ಶಾಸಕರು ಆಯ್ಕೆ ಆಗುತ್ತಾರೆ. ನೀವೇ ಕಾದು ನೋಡಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ವಿರುದ್ಧ ಸಿಎಂ ವಾಗ್ದಾಳಿ
ಗುಜರಾತ್ ಚುನಾವಣೆ ಲಿತಾಂಶ ಕರ್ನಾಟಕಕ್ಕೆ ಯಾವ ಪರಿಣಾಮ ಬೀರುವುದಿಲ್ಲ. ನಾವು ಮನೆಯಲ್ಲಿ ಕುಳಿತುಕೊಂಡರೂ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, 2023ನೇ ಸಾಲಿನ ಮೇ ತಿಂಗಳ ನಂತರ ಸಿದ್ದರಾಮಯ್ಯ ಅವರು ಮನೆಗೆ ಹೋಗುವ ಕಾರ್ಯಕ್ರಮ ಇದೆ. ಇದು ಅವರಿಗೆ ಗೊತ್ತಾಗಿದ್ದರಿಂದ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಚುನಾವಣೆ ಚರ್ಚೆ ಬಲು ಜೋರು
ಈಗಾಗಲೇ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇನ್ನು ಕರ್ನಾಟಕ ರಾಜ್ಯದಲ್ಲಿ ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆ ಬಗ್ಗೆ ಹೆಚ್ಚು ಚರ್ಚೆ ಆಗುವುದು ಸಹಜವಾಗಿದೆ. ಬಿಜೆಪಿ ಪಕ್ಷದಿಂದ ಜನ ಸಂಪರ್ಕ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಈಗ ಚುನಾವಣಾ ದೃಷ್ಟಿಯಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ವಿವಿಧ ಸ್ತರಗಳ ಕೋರ್ ಕಮಿಟಿಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ಈ ಸಂದರ್ಭಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಎಲ್. ನಾಗೇಂದ್ರ, ಹರ್ಷವರ್ಧನ್, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಮುಖಂಡರಾದ ಅಪ್ಪಣ್ಣ, ಎಲ್.ಆರ್. ಮಹದೇವಸ್ವಾಮಿ, ಕಾ.ಪು. ಸಿದ್ಧಲಿಂಗಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications