ಸರಕಾರಕ್ಕೆ ಗೊತ್ತಿಲ್ಲವಂತೆ, ತಮಿಳುನಾಡಿಗೆ ನೀರು ಬಿಟ್ಟಿದ್ದು ಯಾರು?
ಮೈಸೂರು, ಜುಲೈ 1: ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ ಜಲಾಶಯ ಮತ್ತು ಕಬಿನಿ ಜಲಾಶಯಗಳಿಂದ ನೀರನ್ನು ಹೊರಕ್ಕೆ ಬಿಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸರಕಾರದ ಗಮನಕ್ಕೆ ತಾರದೆ ಅಧಿಕಾರಿಗಳು ನೀರು ಹರಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿರುವುದು ಅಚ್ಚರಿ ಮೂಡಿಸಿದೆ.
ಇಷ್ಟಕ್ಕೂ ಯಾರ ಗಮನಕ್ಕೂ ತರದೆ, ಏಕಾಏಕಿ ರಾತ್ರೋರಾತ್ರಿ ನೀರು ಬಿಡಲು ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದವರು ಯಾರು ಎಂಬ ಪ್ರಶ್ನೆಯೂ ಇಲ್ಲಿ ಮೂಡಿದೆ. ಇಲ್ಲಿ ಸರಕಾರ ನುಣುಚಿಕೊಳ್ಳುವ ಪ್ರಯತ್ನದಲ್ಲಿ ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಲಾಗುತ್ತಿದೆಯಾ ಎಂಬುದನ್ನು ತಳ್ಳಿಹಾಕುವಂತಿಲ್ಲ.

ಆದರೆ, ಅಧಿಕಾರಿಗಳು ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಹಾರಿಕೆಯ ಉತ್ತರ ನೀಡಿ ನುಣುಚಿಕೊಳ್ಳುತ್ತಿದ್ದಾರೆ.
ಕೆಆರ್ ಎಸ್ ಜಲಾಶಯ ಭರ್ತಿಯಾಗದ ಕಾರಣ ಎರಡು ವರ್ಷಗಳಿಂದ ಸ್ಥಳೀಯ ರೈತರಿಗೆ ಅನ್ನ ಇಲ್ಲದಂತಾಗಿದೆ. ಹಲವು ರೈತರು ಈಗಾಗಲೇ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈಗಷ್ಟೆ ಕಾವೇರಿ ಕೊಳ್ಳದಲ್ಲಿ ಮಳೆ ಚುರುಕುಗೊಂಡಿದ್ದು, ಸುಮಾರು 17 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, ತಳ ಕಂಡಿದ್ದ ಜಲಾಶಯದಲ್ಲಿ ಚೇತರಿಕೆ ಕಾಣಿಸಿದೆ. ಸದ್ಯ 71 ಅಡಿಯಷ್ಟು ನೀರು ತುಂಬಿದೆ.
ಪರಿಸ್ಥಿತಿ ಹೀಗಿರುವಾಗ ಭಾರೀ ಪ್ರಮಾಣದ ನೀರನ್ನು ಹರಿಯಲು ಬಿಟ್ಟಿರುವುದು ಅನುಮಾನಗಳಿಗೆ ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇಷ್ಟಕ್ಕೂ ಸರಕಾರದ ಗಮನಕ್ಕೆ ತರದೆ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜತೆಗೆ ಕೃಷಿ ಕಾಲುವೆಗೆ ನೀರನ್ನು ಹರಿಸದೆ ನೇರವಾಗಿ ನದಿಗೆ ಬಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಈಗಾಗಲೇ ಪ್ರತಿಭಟನೆಗಳು ಆರಂಭವಾಗಿದ್ದು, ಸರಕಾರ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿ ರೈತರನ್ನು ಹೆಡೆಮುರಿಗೆ ಕಟ್ಟಲು ಮುಂದಾಗಿದೆ. ಈ ನಡುವೆ ಮಾಜಿ ಸಂಸದ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅವರು ತಮಿಳುನಾಡಿಗೆ ನೀರು ಬಿಟ್ಟರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ಜನರ ಕುಡಿಯುವ ಉಪಯೋಗಕ್ಕೆಂದು ತಪ್ಪು ಮಾಹಿತಿ ನೀಡಿ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದ್ದು, ತಕ್ಷಣ ನೀರನ್ನು ನಿಲ್ಲಿಸದಿದ್ದರೆ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಿದ್ದಾರೆ.












Click it and Unblock the Notifications