Get Updates
Get notified of breaking news, exclusive insights, and must-see stories!

Chunchanakatte: ಚುಂಚನಕಟ್ಟೆಯಲ್ಲಿ ಭಕ್ತರಿಗೆ ನೀಡುತ್ತಿದ್ದ ದಾಸೋಹ ಸ್ಥಗಿತಕ್ಕೆ ಕಾರಣವೇನು?

ಮೈಸೂರು, ಮೇ 23: ಮೈಸೂರು ಜಿಲ್ಲೆಯಲ್ಲಿರುವ ಪವಿತ್ರ ಕ್ಷೇತ್ರಗಳ ಪೈಕಿ ಒಂದಾಗಿರುವ ಸಾಲಿಗ್ರಾಮ ತಾಲೂಕಿನ ಇತಿಹಾಸ ಪ್ರಸಿದ್ಧ ಚುಂಚನಕಟ್ಟೆ ಶ್ರೀ ಕೋದಂಡರಾಮ ದೇವಾಲಯಕ್ಕೆ ಪ್ರತಿನಿತ್ಯವೂ ಭಕ್ತರು ಆಗಮಿಸಿ ದೇವರ ದರ್ಶನ ಮಾಡಿಕೊಂಡು ತೆರಳುತ್ತಾರೆ. ಹೀಗೆ ಬರುವಭಕ್ತರಿಗೆ ವಾರಾಂತ್ಯದ ಎರಡು ದಿನ ಅನ್ನಸಂತರ್ಪಣೆ ನಡೆಯುತ್ತಿತ್ತು. ಆದರೀಗ ಅದು ಸ್ಥಗಿತಗೊಂಡಿರುವುದು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ವಾರಾಂತ್ಯದ ದಿನಗಳಲ್ಲಿ ಈ ಕ್ಷೇತ್ರಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಜತೆಗೆ ಇಲ್ಲಿ ಜಲಪಾತವೂ ಇರುವುದರಿಂದ ಪ್ರವಾಸಿಗರು ಕೂಡ ಬರುತ್ತಿರುತ್ತಾರೆ. ಹೀಗೆ ಬರುವವರಿಗೆ ಶನಿವಾರ ಮತ್ತು ಭಾನುವಾರ ದೇವಸ್ಥಾನದ ವತಿಯಿಂದ ದಾಸೋಹದ ವ್ಯವಸ್ಥೆ ಮಾಡಲಾಗುತ್ತಿತ್ತು. ಹೀಗಾಗಿ ದೇವಸ್ಥಾನಕ್ಕೆ ಬಂದವರು ಊಟ ಮಾಡಿಕೊಂಡು ಹೋಗುತ್ತಿದ್ದರು. ಆದರೀಗ ದಾಹೋಹವನ್ನು ಸ್ಥಗಿತಗೊಳಿಸಲಾಗಿದೆ. ದೇವಸ್ಥಾನದಲ್ಲಿ ದಾಸೋಹವನ್ನು ಸ್ಥಗಿತಗೊಳಿಸಿರುವುದು ಈಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ದಾಸೋಹ ಸ್ಥಗಿತಗೊಳಿಸಿರುವುದಕ್ಕೆ ಅನುದಾನದ ಕೊರತೆ ಕಾರಣ ಎಂದು ಹೇಳಲಾಗುತ್ತಿದೆ.

Why Dasoha Stopped In Mysuru Chunchanakatte Kodanda Rama Temple

ಇನ್ನು ಈ ದಾಸೋಹ ಕಾರ್ಯಕ್ರಮವನ್ನು ಈ ಹಿಂದೆ ಶಾಸಕರಾಗಿದ್ದ ಸಾ ರಾ ಮಹೇಶ್ ರವರು ಸರ್ಕಾರಕ್ಕೆ ಮನವಿ ಮಾಡಿ ವಾರದ ಅಂತ್ಯದ ದಿನಗಳಲ್ಲಿ ಶನಿವಾರ ಮತ್ತು ಭಾನುವಾರ ಜಲಪಾತ ವೀಕ್ಷಣೆ ಮತ್ತು ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ಉಪಹಾರವಾಗಿ ಪ್ರಸಾದ ವ್ಯವಸ್ಥೆಯನ್ನು ಮಾಡಿಸಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಆದರೆ ಅನುದಾನದ ಕೊರತೆಯಿಂದ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಕ್ಷೇತ್ರಕ್ಕೆ ವಾರ್ಷಿಕವಾಗಿ ಏಳೆಂಟು ಲಕ್ಷ ಆದಾಯವಿದ್ದು ದಾಸೋಹ ನೀಡುವುದು ಕಷ್ಟವೇನಲ್ಲ ಎಂಬುದು ಭಕ್ತರ ಅಭಿಪ್ರಾಯವಾಗಿದೆ.

ಆದಾಯ ಹೆಚ್ಚಿದ ಮೇಲೆ ಪುನರಾರಂಭ

ಇನ್ನು ದಾಸೋಹ ಸ್ಥಗಿತದ ಕುರಿತಂತೆ ದೇವಸ್ಥಾನದ ಮೂಲಗಳ ದೇವಾಲಯದ ವ್ಯಾಪ್ತಿಯಲ್ಲಿ ಚುಂಚನಕಟ್ಟೆ ಮುಖ್ಯರಸ್ತೆಯ ಆಸುಪಾಸಿನಲ್ಲಿರುವ ಮಳಿಗೆಗಳು ಖಾಲಿಯಿದ್ದು ಸದ್ಯ ಅವುಗಳನ್ನು ಬಾಡಿಗೆ ನೀಡಿ ದೇವಾಲಯದ ಆದಾಯ ಹೆಚ್ಚಿಸಿ ಇಂತಹ ಪ್ರಸಾದ ವಿನಿಯೋಗ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಮುಂದಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರಸಾದ ವ್ಯವಸ್ಥೆ ಮತ್ತೆ ಶುರು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಆದರೆ ದೂರದ ಊರುಗಳಿಂದ ವಾರಾಂತ್ಯದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಮತ್ತು ಪ್ರವಾಸಿಗರು ಚುಂಚನಕಟ್ಟೆಗೆ ಆಗಮಿಸುತ್ತಿದ್ದು ಅವರಿಗೆ ಅನುಕೂಲವಾಗುತ್ತಿತ್ತು ಎಂದು ಭಕ್ತರು ಹೇಳುತ್ತಿದ್ದಾರೆ.

ಇನ್ನು ಕಾವೇರಿ ನದಿ ದಡದಲ್ಲಿರುವ ಚುಂಚನಕಟ್ಟೆ ಯಾತ್ರಾ ಸ್ಥಳ ಮತ್ತು ಪ್ರವಾಸಿ ತಾಣವೂ ಆಗಿದೆ. ಹಿಂದಿನ ಕಾಲದಲ್ಲಿ ಈ ಕ್ಷೇತ್ರವು ದಟ್ಟ ಕಾಡಿನಿಂದ ಕೂಡಿದ ಅರಣ್ಯವಾಗಿತ್ತಂತೆ. ಇದನ್ನು ದಂಡಕಾರಣ್ಯವೆಂದು ಕರೆಯಲಾಗುತ್ತಿತ್ತಂತೆ. ಒಮ್ಮೆ ಇಲ್ಲಿಗೆ ಆಗಮಿಸಿದ ತೃಣಬಿಂಧು ಮಹರ್ಷಿಗಳು ಈ ಸ್ಥಳವನ್ನು ನೋಡಿ ತಮ್ಮ ತಪಸ್ಸಿಗೆ ಇದು ಸೂಕ್ತ ಸ್ಥಳವೆಂದು ನಿರ್ಧರಿಸುತ್ತಾರೆ. ಆದರೆ ತಪಸ್ಸು ಮಾಡುವ ಮುನ್ನ ಸ್ನಾನ, ಜಪ ಮಾಡಲು ನದಿ ಅವಶ್ಯಕತೆಯಿರುವುದರಿಂದ ಅವರು ನದಿಗಾಗಿ ಹುಡುಕಾಡುತ್ತಾರೆ.

Why Dasoha Stopped In Mysuru Chunchanakatte Kodanda Rama Temple

ಬಂಡೆ ಚೂರಾಗಿ ಉಕ್ಕಿ ಹರಿದ ಕಾವೇರಿ

ಈ ವೇಳೆ ಅವರಿಗೆ ಅಲ್ಲಿಯೇ ಗುಪ್ತಗಾಮಿನಿಯಾಗಿ ಹರಿಯುವ ಕಾವೇರಿ ನದಿ ಕಾಣಿಸುವುದಿಲ್ಲ. ಹೀಗಾಗಿ ನಾರಾಯಣನನ್ನು ಕುರಿತು ತಪಸ್ಸು ಮಾಡಲು ಆರಂಭಿಸುತ್ತಾರೆ. ಅವರ ತಪಸ್ಸಿಗೆ ಒಲಿದ ನಾರಾಯಣ ಗುಪ್ತಗಾಮಿನಿಯಾದ ಹರಿಯುತ್ತಿದ್ದ ಕಾವೇರಿಯನ್ನು ತೋರಿಸುತ್ತಾರೆ. ಅಷ್ಟೇ ಅಲ್ಲದೆ ತ್ರೇತಾಯುಗದಲ್ಲಿ ರಾಮನ ಅವತಾರವೆತ್ತಿ ರಾವಣನನ್ನು ಸಂಹಾರ ಮಾಡಿ ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಡುತ್ತೇನೆಂದು ಮಾತು ನೀಡುತ್ತಾನೆ. ಕಾಲಾಂತರದಲ್ಲಿ ತ್ರೇತಾಯುಗದಲ್ಲಿ ಶ್ರೀರಾಮ, ಸೀತೆ ಲಕ್ಷ್ಮಣರಾದಿಯಾಗಿ ಸೇನೆಯು ಲಂಕೆಯಲ್ಲಿ ರಾವಣನನ್ನು ಸಂಹಾರ ಮಾಡಿ ಹಿಂತಿರುಗುವಾಗಿ ಈ ಕ್ಷೇತ್ರಕ್ಕೆ ಬಂದಿದ್ದರೆಂದೂ ಈ ವೇಳೆ ಲಕ್ಷ್ಮಣನಿಗೆ ರಾಮ ಬಂಡೆಯನ್ನು ಒಡೆಯಲು ಹೇಳುತ್ತಾನೆ.

ಲಕ್ಷ್ಮಣ ಹೊಡೆದ ಬಾಣಕ್ಕೆ ಬಂಡೆ ಚೂರಾಗಿ ಒಡೆದು ಕಾವೇರಿ ಉಕ್ಕಿ ಹರಿಯುತ್ತಾಳೆ. ಇಲ್ಲಿನ ವಿಶೇಷತೆ ಏನೆಂದರೆ ರಾಮದೇವರ ದೇವಾಲಯದ ಗರ್ಭಗುಡಿಯಲ್ಲಿ ಕಾವೇರಿ ಭೋರ್ಗರೆಯುವ ಶಬ್ದ ಕೇಳಿಸುವುದಿಲ್ಲ. ಇನ್ನು ಲಕ್ಷ್ಮಣ ಬಾಣ ಬಿಟ್ಟ ಸ್ಥಳದಲ್ಲಿ ಜಲಪಾತ ಸೃಷ್ಟಿಯಾಗಿದ್ದು, ಅದುವೇ ಧನುಷ್ಕೋಟಿಯಾಗಿದೆ. ಸದ್ಯ ಈ ಕ್ಷೇತ್ರ ಭಕ್ತರ ಸೆಳೆಯುವ ತಾಣವಾಗಿದೆ. ಇನ್ನು ಮಳೆ ಸುರಿದು ಕಾವೇರಿ ನದಿ ಉಕ್ಕಿ ಹರಿದಾಗ ಕಾವೇರಿಯ ಜಲನೃತ್ಯ ನೋಡಲು ಚುಂಚನಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವುದು ಸಾಮಾನ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+