ಜೀವವೈವಿಧ್ಯ ಪಾರಂಪರಿಕ ತಾಣವಾಗುವುದೇ ಚಾಮುಂಡಿ ಬೆಟ್ಟ?
ಮೈಸೂರು, ಜನವರಿ 31: ಚಾಮುಂಡಿ ಬೆಟ್ಟವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರ್ನಾಟಕ ಜೀವ ವೈವಿಧ್ಯ ಮಂಡಳಿಯಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಜೀವವೈವಿಧ್ಯ ಸಂರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಕೆಆರ್ ಎಸ್ ಸಂರಕ್ಷಣೆ ನಿಟ್ಟಿನಲ್ಲಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು" ಎಂದು ಹೇಳಿದರು.
ಚಾಮುಂಡಿ ಬೆಟ್ಟದ ಮುಂಜಾನೆ ಮಂಜಿನಾಟ ಎಂದಾದರೂ ನೋಡಿದ್ದೀರಾ?
"ಚಾಮುಂಡಿ ಬೆಟ್ಟ ಜೀವ ವೈವಿಧ್ಯ ಪಾರಂಪರಿಕ ತಾಣ ಎಂಬುದಾಗಿ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನ ಜೀವ ವೈವಿಧ್ಯ ಸಮಿತಿ ಅಥವಾ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಶಿಫಾರಸ್ಸು ಮಾಡಬೇಕಿದೆ. ಈ ಕುರಿತು ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು. "ಲಕ್ಷ್ಮಣ ತೀರ್ಥ ನದಿ ಶುದ್ಧೀಕರಣ ಪರಿಸರ ಉಳಿವಿನ ಬಗ್ಗೆ ವಿಶೇಷ ಕಾರ್ಯಕ್ರಮ ರೂಪಿಸಲು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದೆ.
ಹುಣಸೂರು ನಗರ ಸಭೆ ಮುಂದಾಳತ್ವದಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುವುದು. ಪ್ರತಿ ವರ್ಷ ಮೇ 22ರಂದು ಅಂತರ ರಾಷ್ಟ್ರೀಯ ಜೀವ ವೈವಿಧ್ಯ ದಿನ ಆಚರಿಸಲು ಎಲ್ಲಾ ಜೀವ ವೈವಿಧ್ಯ ಸಮಿತಿಗೆ ತಿಳಿಸಲಾಗಿದೆ" ಎಂದು ಮಾಹಿತಿ ನೀಡಿದರು.