ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಶೋಭಾ ಕರಂದ್ಲಾಜೆ
ಮೈಸೂರು, ಜುಲೈ 27 : 'ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಸಮೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ನಾನು 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಶೋಭಾ ಕರಂದ್ಲಾಜೆ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಶುಕ್ರವಾರ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ' ಎಂದರು.

'ಲೋಕಸಭೆ ಚುನಾವಣೆಗೆ ಸರ್ವೇ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪರಿಸ್ಥಿತಿಯನ್ನು ನೋಡಿಕೊಂಡು ಪಕ್ಷ ತೀರ್ಮಾನವನ್ನು ಕೈಗೊಳ್ಳಲಿದೆ' ಎಂದು ತಿಳಿಸಿದರು.
2008ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದಾಗ ಶೋಭಾ ಕರಂದ್ಲಾಜೆ ಅವರು ಸಚಿವರಾಗಿದ್ದರು. 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.
ಬಳಿಕ 2014ರ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಚುನಾವಣೆಯಲ್ಲಿ 5,81,168 ಮತಗಳನ್ನು ಪಡೆದು ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗಡೆ ಅವರನ್ನು ಸೋಲಿಸಿದ್ದರು.
ಆದರೆ, ಈಗ 2019ರ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರೆ. ಶೋಭಾ ಕರಂದ್ಲಾಜೆ ಅವರ ನಿರ್ಧಾರಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.












Click it and Unblock the Notifications