ತರಕಾರಿ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆಗೆ ತೀರ್ಮಾನ
ಮೈಸೂರು, ನವೆಂಬರ್ 13: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರ, ಶಾಸಕರ ಮನೆಗೆ ದೀಪಾವಳಿ ಹಬ್ಬದ ಉಡುಗೊರೆಯಾಗಿ ಬೆಲೆ ಏರಿಕೆಯಾಗಿರುವ ತರಕಾರಿಗಳನ್ನು ನೀಡಲು ಮಹಿಳೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹೇಳಿದರು.
ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮಧ್ಯಮ ಮತ್ತು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಬಿಜೆಪಿ ನಾಯಕರಿಗೆ ಹಾಗೂ ಸರ್ಕಾರಕ್ಕೆ ತಿಳಿಸುವ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ಸಚಿವರ-ಶಾಸಕರ ಮನೆಗೆ ಈರುಳ್ಳಿ, ಆಲೂಗಡ್ಡೆ, ಟೊಮೆಟೊ ಮುಂತಾದ ದಿನನಿತ್ಯದ ವಸ್ತುಗಳನ್ನು ಗಿಫ್ಟ್ ಆಗಿ ನೀಡುವ ಮೂಲಕ ವಿಶೇಷ ಪ್ರತಿಭಟನೆ ನಡೆಸಲು ಚಿಂತಿಸಿದೆ ಎಂದರು.
ಶೋಭಕ್ಕ ಮೌನವಾಗಿರುವುದೇಕೆ: ಶಾಸಕ ಸಿದ್ದು ಸವದಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಶೋಭಕ್ಕ ಏಕೆ ಇದರ ಬಗ್ಗೆ ಏಕೆ ಮಾತನಾಡಿಲ್ಲ. ಬೇಡದ ವಿಚಾರಕ್ಕೆ ಮೂಗು ತೋರಿಸುವ ಶೋಭಕ್ಕ ಮಹಿಳೆಯಾಗಿ ಈ ವಿಚಾರದಲ್ಲಿ ಯಾಕೆ ಮೌನವಾಗಿದ್ದಾರೆ. ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಭಾರತ್ ಮಾತಾ ಕೀ ಜೈ ಎಂದರೆ ಸಾಕಾಗಲ್ಲ. ಮಹಿಳೆ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಿ ಎಂದರು.

ಬಿಜೆಪಿ ರಾಜ್ಯಗಳಲ್ಲಿ ಮಹಿಳೆ ಮೇಲಿನ ದೌರ್ಜನ್ಯಗಳು ನಡೆಯುತ್ತಿವೆ. ಮಹಾತ್ಮ ಗಾಂಧೀಜಿ ಅವರು ಮಧ್ಯರಾತ್ರಿಯಲ್ಲಿ ಮಹಿಳೆ ಓಡಾಟ ನಡೆಸಿದರೆ ರಾಮರಾಜ್ಯ ಆಗುತ್ತದೆ ಎಂದು ಹೇಳಿದ್ದರು. ಆದರೆ ಬಿಜೆಪಿ ಸರ್ಕಾರದಲ್ಲಿ ಬೆಳಗ್ಗಿನ ವೇಳೆಯಲ್ಲೇ ಓಡಾಟ ನಡೆಸುವುದು ಕಷ್ಟವಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕೂಡ ಧ್ವನಿ ಎತ್ತುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಲತಾ ಸಿದ್ದಶೆಟ್ಟಿ, ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಪುಷ್ಪವಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.












Click it and Unblock the Notifications