ಜನರನ್ನು ರಕ್ಷಿಸಿ ಎಂದು ಪ್ರಧಾನಿ ಹೇಳಿರುವುದು ಸಮಾಧಾನ ತಂದಿದೆ: ಬಿಎಸ್ವೈ
ಬೆಂಗಳೂರು, ಅ. 17: ಕೊನೆಗೂ ರಾಜ್ಯದಲ್ಲಿನ ಪ್ರವಾಹ ಹಾಗೂ ಅತಿವೃಷ್ಟಿ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮುಖ್ಯಮಂತ್ರಿಗಳೊಂದಿಗೆ ಪ್ರವಾಹ, ಅತಿವೃಷ್ಟಿ ಕುರಿತು ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡುವ ಗೋಜಿಗೆ ಹೋಗಿರಲಿಲ್ಲ. ಇದು ರಾಜ್ಯದ ಜನತೆ ಹಾಗೂ ವಿರೋಧ ಪಕ್ಷಗಳ ನಾಯಕರ ಭಾರಿ ಆಕ್ಷೇಪಕ್ಕೆ ಗುರಿಯಾಗಿತ್ತು.
ಮೈಸೂರಿನಲ್ಲಿ ಇಂದು ದಸರಾ ಉದ್ಘಾಟನೆ ಬಳಿಕ ಭಾಷಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಮಾತನಾಡಿರುವುದನ್ನು ಪ್ರಸ್ತಾಪಿಸಿದರು. ನಿನ್ನೆ ಪ್ರಧಾನಿ ಮಾತನಾಡಿ ರಾಜ್ಯದ ಪ್ರವಾಹದ ಪರಿಸ್ಥಿತಿ ಕುರಿತು ತಿಳಿದುಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಜನರನ್ನು ರಕ್ಷಿಸಿ ಎಂದು ಪ್ರಧಾನಿ ಹೇಳಿರುವುದು ಸಮಾಧಾನ ತಂದಿದೆ. ಕಂದಾಯ ಸಚಿವ ಆರ್. ಅಶೋಕ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಹೋಗಿದ್ದಾರೆ. ಎಲ್ಲ ರೀತಿಯ ಪರಿಹಾರಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.
ನಷ್ಟದ ಕುರಿತು ಸಿಎಂ ಯಡಿಯೂರಪ್ಪ ಮಾಹಿತಿ: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಒಟ್ಟು ಸುಮಾರು 9,952 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹಣಕಾಸು ಸಚಿವನಾಗಿ ರಾಜ್ಯವನ್ನು ಆರ್ಥಿಕವಾಗಿ ಸದೃಢವಾಗಿಡಲು ಪ್ರಯತ್ನಿಸುತ್ತಿದ್ದೇವೆ ಎಂದರು.