ಮೈಸೂರು; ಅರಮನೆ ಆವರಣದಲ್ಲಿ ಅಂತಿಮ ಹಂತದ ಯೋಗ ತಾಲೀಮು
ಮೈಸೂರು, ಜೂನ್ 19: ವಿಶ್ವ ಯೋಗ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಯೋಗ ಕಾರ್ಯಕ್ರಮದ ಅಂತಿಮ ಹಂತದ ತಾಲೀಮು ಮೈಸೂರಿನಲ್ಲಿ ಭಾನುವಾರ ನಡೆಯಿತು.
ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ತಾಲೀಮು ವೀಕ್ಷಿಸಿದರು.
ಅರಮನೆ ಆವರಣದಲ್ಲಿ ಬೆಳಗ್ಗೆ 6.30ಕ್ಕೆ 10 ಸಾವಿರಕ್ಕೂ ಅಧಿಕ ಯೋಗಪಟುಗಳಿಂದ ಯೋಗ ತಾಲೀಮು ನಡೆಸಲಾಯಿತು.
ಯೋಗ ಕಾರ್ಯಕ್ರಮದ ಅಂಗವಾಗಿ ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಸಚಿವರು ವೀಕ್ಷಿಸಿದರು.

ಎಲ್ಲರೂ ಸಹಕರಿಸಲು ಮನವಿ; ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ಜೂನ್ 5 ಮತ್ತು 11ರಂದು ಯೋಗ ತಾಲೀಮು ನಡೆಸಲಾಗಿದ್ದು ಇಂದು ಅಂತಿಮ ಹಂತದ ತಾಲೀಮು ನಡೆಸಲಾಗಿದೆ" ಎಂದು ಹೇಳಿದರು.
"51 ವಿವಿಧ ವರ್ಗದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಯೋಗ ಮಾಡಲಿದ್ದಾರೆ. ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆ ಪ್ರವೇಶ ಕಲ್ಪಿಸಲಾಗಿದೆ. ಬೆಳಗ್ಗೆ 5.30ಕ್ಕೆ ಪ್ರವೇಶದ್ವಾರ ಬಂದ್ ಆಗಲಿದೆ. ಯೋಗ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದೇನೆ" ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವೀಕ್ಷಣೆ ನಡೆಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಜೊತೆಯಲ್ಲಿದ್ದರು.

ಭದ್ರತೆ, ರಸ್ತೆಗಳ ಸ್ಥಿತಿಗತಿ ಪರಿಶೀಲನೆ; ಪ್ರಧಾನಮಂತ್ರಿ ನರೇಂದ್ರ ಮೋದಿ ವಾಸ್ತವ್ಯ ಹೂಡುವ ಹೋಟೆಲ್, ಸಂಚರಿಸುವ ರಸ್ತೆಗಳಲ್ಲಿ ಕೈಗೊಳ್ಳಬೇಕಿರುವ ಭದ್ರತೆ, ರಸ್ತೆಗಳ ಸ್ಥಿತಿಗತಿಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ವೀಕ್ಷಣೆ ಮಾಡಿದರು.
ಕರ್ನಾಟಕದ 75 ಸ್ಥಳಗಳಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಆಗತ್ಯ ವ್ಯವಸ್ಥೆಗಳ ಬಗ್ಗೆ ಕೇಂದ್ರ ಆಯುಷ್ ಇಲಾಖೆಯ ಅಧಿಕಾರಿಗಳ ತಂಡವು ಅರಮನೆ ಆವರಣಕ್ಕೆ ಭೇಟಿ ನೀಡಿ ಆಗತ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿತು.












Click it and Unblock the Notifications