ಹುಣಸೂರಿನಲ್ಲಿ ವಿಶ್ವನಾಥ್ ಸೋಲಿಗೆ ಜಿಟಿಡಿ ಬೊಟ್ಟು ಮಾಡಿದ್ದು ಇವರತ್ತ
ಮೈಸೂರು, ಡಿಸೆಂಬರ್ 11: ಹುಣಸೂರು ಉಪ ಚುನಾವಣೆಯಲ್ಲಿ ಎಚ್ ವಿಶ್ವನಾಥ್ ಸೋಲಿಗೆ ಸಿ.ಪಿ. ಯೋಗೇಶ್ವರ್ ಕಾರಣ ಎನ್ನುವ ಮೂಲಕ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನ ಜಯಪುರದಲ್ಲಿ ಇಂದು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಯೋಗೇಶ್ವರ್ ಸಮುದಾಯದ ನಾಯಕರನ್ನು ಟೀಕಿಸಿದ್ದರಿಂದ ಒಕ್ಕಲಿಗರು ವಿಶ್ವನಾಥ್ ವಿರುದ್ಧ ತಿರುಗಿ ಬಿದ್ದರು. ಇದೇ ಅವರ ಸೋಲಿಗೆ ಕಾರಣವಾಗಿದೆ" ಎಂದು ಹೇಳಿದ್ದಾರೆ.
ಒಕ್ಕಲಿಗರು ತಿರುಗಿಬಿದ್ದದ್ದೇ ಸೋಲಿಗೆ ಕಾರಣ
ಯೋಗೇಶ್ವರ್, ಪ್ರಚಾರದ ಸಂದರ್ಭ "ಅವನ್ಯಾರು ದೇವೇಗೌಡ, ಕುಮಾರಸ್ವಾಮಿ, ಜಿ.ಟಿ.ದೇವೇಗೌಡ ಅಂತೆಲ್ಲ ಮಾತನಾಡಿದ್ರು. ದುಡ್ಡು, ಸೀರೆ, ಕುಕ್ಕರ್ ಹಂಚಿ ಗೆಲ್ಲುತ್ತೇವೆ ಎಂಬ ಹುಂಬತನ ಇತ್ತು. 5 ಕೋಟಿ ಆಮಿಷ ತೋರಿ ಒಕ್ಕಲಿಗರನ್ನು ಓಲೈಸುವ ಪ್ರಯತ್ನ ಮಾಡಿದರು. ಈ ಎಲ್ಲಾ ಅಂಶಗಳು ಸೇರಿ ಹುಣಸೂರಿನಲ್ಲಿ ವಿಶ್ವನಾಥ್ ಸೋಲಿಗೆ ಕಾರಣವಾಯಿತು" ಎಂದು ಹೇಳಿದರು.
ಹುಣಸೂರು ಉಪ ಸಮರದಲ್ಲಿ ಗೆಲುವು; ದೇವೇಗೌಡರ ನೆನೆದ ಕೈ ಅಭ್ಯರ್ಥಿ
ವಿಶ್ವನಾಥ್ ಗೆ ತಿರುಗೇಟು ನೀಡಿದ ಜಿಟಿಡಿ
ಜಿ.ಟಿ.ದೇವೇಗೌಡ ಪಕ್ಷದ್ರೋಹಿ ಎಂಬ ಹೇಳಿಕೆ ವಿಚಾರಕ್ಕೆ ವಿಶ್ವನಾಥ್ಗೆ ತಿರುಗೇಟು ನೀಡಿದ ಅವರು, "ಹುಣಸೂರಿನಲ್ಲಿ ವಿಶ್ವನಾಥ್ ಬೆಂಬಲಿಸುತ್ತೇನೆ ಅಂತ ನಾನು ಎಲ್ಲಿಯೂ ಹೇಳಿರಲಿಲ್ಲ. ಇಡೀ ಚುನಾವಣೆಯಲ್ಲಿ ನಾನು ಭಾಗವಹಿಸಲ್ಲ ಅಂತ ಮೊದಲೇ ಹೇಳಿದ್ದೆ. ಅಂದ ಮೇಲೆ ಪಕ್ಷದ್ರೋಹಿ ಹೇಗಾಗುತ್ತೆ? ನಾನು ಈಗಲೂ ತಟಸ್ಥನಾಗಿಯೇ ಇದ್ದೇನೆ" ಎಂದು ತಿಳಿಸಿದರು.
ಮಗನನ್ನು ಸಮರ್ಥಿಸಿಕೊಂಡ ದೇವೇಗೌಡರು
"ನನ್ನ ಮಗ ಸ್ವತಂತ್ರನಿದ್ದಾನೆ. ಅವನು ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾನೆ. ಯೋಗೀಶ್ವರ್ ಟೀಕೆ ನಂತರ ನನ್ನ ಮಗ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟು ನಿರ್ಧಾರ ಕೈಗೊಂಡಿದ್ದಾನೆ" ಎನ್ನುವ ಮೂಲಕ ಕಾಂಗ್ರೆಸ್ ಬೆಂಬಲ ವಿಚಾರದಲ್ಲಿ ಮಗನನ್ನು ಸಮರ್ಥಿಸಿಕೊಂಡರು.
ವಿಶ್ವನಾಥ್ ಜನರನ್ನು ಅರ್ಥ ಮಾಡಿಕೊಳ್ಳುವಲ್ಲಿ ಸೋತರು
"ವಿಶ್ವನಾಥ್ ಹುಣಸೂರು ಕ್ಷೇತ್ರ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾದರು. ಅವರು ಎಲ್ಲಿಂದಲೋ ಬಂದವರು. ದೇವೇಗೌಡರು, ನಾನು ಒಟ್ಟಿಗೆ ಸೇರಿ ಗೆಲ್ಲಿಸಿಕೊಂಡಿದ್ವಿ. ಆದರೆ ಅದನ್ನು ಉಳಿಸಿಕೊಳ್ಳಲು ವಿಶ್ವನಾಥ್ ಕೈಯಲ್ಲಿ ಆಗಲಿಲ್ಲ. ಹಳ್ಳಿ ಹಳ್ಳಿಯಲ್ಲಿ ಜನ ಆಕ್ರೋಶ ಹೊರಹಾಕಿದರು. ಗ್ರಾಮಗಳ ಒಳಗೆ ಬಿಟ್ಟುಕೊಳ್ಳಲಿಲ್ಲ" ಎಂದರು.