ಮೈಸೂರು: ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ಮೈಸೂರು, ಸೆಪ್ಟೆಂಬರ್ 30: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರವನ್ನು ಖಂಡಿಸಿ, ತಪ್ಪಿತಸ್ಥರಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ಸ್ ಆರ್ಗನೈಸೇಶನ್ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರ ಶೋಚನೀಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಇಂತಹ ಘಟನೆಗಳು ತೋರಿಸುತ್ತವೆ ಟಿಕಿಸಿದರು.
ಹಲವಾರು ದೊಡ್ಡ ಭಾಷಣಗಳ ಹೊರತಾಗಿಯೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಅದೇ ಬಿಜೆಪಿ ನೇತೃತ್ವದ ಯುಪಿ ಸರ್ಕಾರ ಮಹಿಳೆಯರ ಹಾಗೂ ಮಕ್ಕಳ ಘನತೆಯನ್ನು ಕಾಪಾಡುವಲ್ಲಿ ಸೋತು ಹೋಗಿವೆ ಎಂದು ಆರೋಪಿಸಿದರು.

ಭಾರತೀಯ ಸಂಸ್ಕೃತಿಯ ಹರಿಕಾರರು ಈ ದೇಶದ ಮಹಿಳೆಯರನ್ನು ರಕ್ಷಿಸುವುದರ ಕುರಿತು ಯಾವುದೇ ಕಾಳಜಿಯನ್ನು ಹೊಂದಿಲ್ಲದಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧಿಗಳೊಂದಿಗೆ ನಿಂತಿರುವುದು ಅತ್ಯಂತ ನೋವು ತರಿಸುವಂಥದ್ದು. ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಅಶ್ಲೀಲತೆ, ಡ್ರಗ್ಸ್ ಮತ್ತು ಮದ್ಯವನ್ನು ಕೊನೆಗೊಳಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಂಧ್ಯಾ ಪಿ.ಎಸ್, ಜಿಲ್ಲಾ ಕಾರ್ಯದರ್ಶಿ ಸೀಮಾ, ಜಿಲ್ಲಾಧ್ಯಕ್ಷರಾದ ಹರೀಶ್, ಸುನೀಲ್, ಕಲಾವತಿ, ಆಸಿಯಾಬೇಗಂ, ಚಂದ್ರಕಲಾ ಮತ್ತಿತರರು ಪಾಲ್ಗೊಂಡಿದ್ದರು.












Click it and Unblock the Notifications