Yuva Nidhi Scheme: ಜನವರಿಗೆ ಯುವನಿಧಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಭರವಸೆ
ಮೈಸೂರು, ಆಗಸ್ಟ್, 12: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದ ಭರವಸೆಗಳನ್ನು ಒಂದೊಂದಾಗಿ ಜಾರಿ ಮಾಡುತಿದ್ದು, ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಜಾರಿ ಮಾಡಲಾಗುವುದು ಎಂದು ಸಿ.ಎಂ.ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದರು.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯುವನಿಧಿ ಯೋಜನೆಯಿಂದ ಪದವಿ ಮುಗಿಸಿ ಆರು ತಿಂಗಳು ಕೆಲಸ ಸಿಗದ ನಿರುದ್ಯೋಗಿಗಳಿಗೆ ನೆರವಾಗಲಿದೆ. ಪದವಿ ಮುಗಿಸಿದವರಿಗೆ 3000 ಹಾಗೂ ಡಿಪ್ಲೊಮಾ ಪದವೀಧರರಿಗೆ 1500 ದೊರೆಯಲಿದೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ನಡೆಯುತ್ತಿದ್ದು, ಆಗಸ್ಟ್ ಅಂತ್ಯದಲ್ಲಿ ಜಾರಿ ಮಾಡಲಾಗುವುದು ಎಂದರು.

ತಮಿಳುನಾಡು ಕಾವೇರಿ ನೀರಿನ ಬಗ್ಗೆ ಕ್ಯಾತೆ ತೆಗೆದ ವಿಚಾರವಾಗಿ ಮಾತನಾಡಿದ ಅವರು, ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹಾಗಾಗಿ ಎರಡೂ ರಾಜ್ಯಗಳು ಸಂಕಷ್ಟ ಸೂತ್ರವನ್ನು ಪಾಲಿಸಬೇಕಾಗಿದೆ. ಕೇರಳ ಹಾಗೂ ಕೊಡಗು ಭಾಗದಲ್ಲಿ ಮಳೆ ಕಡಿಮೆ ಆಗಿರುವುದರಿಂದ ನಮ್ಮ ಜಲಾಶಯಗಳಲ್ಲಿ ನೀರು ಕಡಿಮೆಯಿದೆ, ಪರಿಸ್ಥಿತಿ ನೋಡಿಕೊಂಡು ನೀರು ಹರಿಸಲಾಗುವುದು ಎಂದರು.
ಇನ್ನು ಬೆಂಗಳೂರು ಬಿಬಿಎಂಪಿ ಬೆಂಕಿ ಅವಘಡದಲ್ಲಿ ಗಾಯಗೊಂಡವನ್ನು 48 ಗಂಟೆಗಳ ಕಾಲ ನಿಗಾದಲ್ಲಿರಿಸಿದ್ದು, ಶೇಕಡಾ 30ಕ್ಕಿಂತ ಕಡಿಮೆ ಸುಟ್ಟ ಗಾಯಗಳಿಗಿರುವವರಿಗೆ ತೊಂದರೆ ಇಲ್ಲ. 9 ಜನರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿದ್ದು, ಅವರಿಗೆ ತ್ವರಿತ ಹಾಗೂ ಉತ್ತಮ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದರು.
ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಡಿಲಿಮೀಟೇಷನ್ಗೆ 10 ವಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ 12 ವಾರ ಕಾಲಾವಕಾಶ ನೀಡಿದ್ದು, ಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದರು.
ಈ ವೇಳೆ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಸೇರಿದಂತೆ ಪಕ್ಷದ ಮತ್ತಿತರು ಉಪಸ್ಥಿತರಿದ್ದರು.












Click it and Unblock the Notifications