1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ
Recommended Video

ನವದೆಹಲಿ, ಡಿಸೆಂಬರ್ 17: 1984 ರಲ್ಲಿ ನಡೆದ ಸಿಖ್ ನರಮೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ದೆಹಲಿಯ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದೆ. ದೆಹಲಿ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಅವರು ಡಿ.31 ರವೊಳಗೆ ಶರಣಾಗುವಂತೆ ಆದೇಶಿಸಿದೆ.
ಈ ಮೂಲಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ್ದ ಟ್ರಯಲ್ ಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾದ ಆದೇಶವನ್ನು ಹೈಕೋರ್ಟ್ ನೀಡಿದೆ.
ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾ.ಭಾಗ್ಮಲ್, ಗಿರಿದರ್ ಲಾಲ್ ಮತ್ತು ಕಾಂಗ್ರೆಸ್ಸಿನ ಮಾಜಿ ಕೌನ್ಸೆಲರ್ ಬಲ್ವಾನ್ ಖೋಖರ್ ಅವರನ್ನೂ ದೋಷಿಗಳೆಂದು ಪರಿಗಣಿಸಿ, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಿಶನ್ ಖೊಕ್ಕರ್ಮತ್ತು ಮಾಜಿ ಶಾಸಕ ಮಹೇಂದರ್ ಯಾದವ್ ಅವರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಘಟನೆ ಏನು?
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಿಂಸಾಚಾರಕ್ಕೆ ಬೆಂಬಲ ನೀಡಿದ ಆರೋಪದ ಎರಡು ಪ್ರಕರಣವನ್ನೂ ಅವರು ಎದುರಿಸುತ್ತಿದ್ದರು.

ಒಬ್ಬ ಆರೋಪಿಗೆ ಗಲ್ಲು ಶಿಕ್ಷೆ
ಇದೇ ನವೆಂಬರ್ 20 ರಂದು ಪ್ರಕರಣದ ಇಬ್ಬರು ಆರೋಪಿಗಳನ್ನು ದೋಷಿ ಎಂದು ಪರಿಗಣಿಸಿದ್ದ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಒಬ್ಬರಿಗೆ ಗಲ್ಲು ಮತ್ತು ಇನ್ನೊಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಯಾರಿಗೆ ಗಲ್ಲು?
1984ರಲ್ಲಿ ದೆಹಲಿಯ ಮಹಿಪಾಲ್ಪುರ್ ಪ್ರದೇಶದಲ್ಲಿ ಇಬ್ಬರು ಸಿಖ್ಖರನ್ನು ಕೊಂದ ಆರೋಪದ ಮೇಲೆ ಯಶ್ ಪಾಲ್ ಸಿಂಗ್ ಎಂಬ ಅಪರಾಧಿಗೆ ಗಲ್ಲು ಶಿಕ್ಷೆ ಘೋಷಿಸಲಾಗಿತ್ತು.ಮತ್ತೊಬ್ಬ ಅಪರಾಧಿ ನರೇಶ್ ಸೆಹ್ರಾವತ್ ಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು.

ಹಲವು ಮುಖಂಡರ ವಿರುದ್ಧ ಪ್ರಕರಣ
1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಅನೇಕ ಮಂದಿ ಮೇಲೆ ಗಲಭೆ, ಹತ್ಯೆ ಪ್ರಕರಣಗಳು ದಾಖಲಾಗಿವೆ.












Click it and Unblock the Notifications