ಬಿಹಾರ : ಹಳಿ ತಪ್ಪಿದ ಎಕ್ಸ್ಪ್ರೆಸ್ ರೈಲು, 4 ಸಾವು
ನವದೆಹಲಿ, ಜೂ. 25 : ಬಿಹಾರದ ಛಾಪ್ರಾ ಬಳಿ ದೆಹಲಿ-ದಿಬ್ರುಗಡ ರಾಜಧಾನಿ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 8 ಜನರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ದೆಹಲಿ-ದಿಬ್ರುಗಡ ರಾಜಧಾನಿ ಎಕ್ಸ್ಪ್ರೆಸ್ ರೈಲಿನ 12 ಬೋಗಿಗಳು ಬುಧವಾರ ಮುಂಜಾನೆ ಸುಮಾರು 2 ಗಂಟೆ ವೇಳೆಯಲ್ಲಿ ಹಳಿತಪ್ಪಿದ್ದು, ಅಪಘಾತದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ 8 ಜನರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. [ರೈಲು ಅಪಘಾತದ ಚಿತ್ರಗಳು]

ಉರುಳಿ ಬಿದ್ದ ಬೋಗಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತದ ಹಿಂದೆ ಮಾವೋವಾದಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ. ರೈಲ್ವೆ ಇಲಾಖೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ಪರಿಹಾರ ಘೋಷಣೆ ಮಾಡಿದೆ. [ರೈಲ್ವೆ ಮಾಸಿಕ ಪಾಸು ದರ ತೀವ್ರ ಹೆಚ್ಚಳ]
ರಕ್ಷಣಾ ಕಾರ್ಯ ನಡೆಯುತ್ತಿದೆ : ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ, ಅಪಘಾತದಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ರೈಲಿನಲ್ಲಿದ್ದ ಪ್ರಯಾಣಿಕರು ತೆರಳಲು ಬೇರೆ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಘಟನೆಯಲ್ಲಿ ಮಾವೋವಾದಿಗಳ ಕೈವಾಡವಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.












Click it and Unblock the Notifications