ರೈತರು ಹಾಗೂ ಸರ್ಕಾರದ ನಡುವೆ ಇಂದು ಮತ್ತೊಂದು ಸುತ್ತಿನ ಮಾತುಕತೆ
ನವದೆಹಲಿ, ಡಿಸೆಂಬರ್ 05: ರೈತರು ಹಾಗೂ ಸರ್ಕಾರದ ನಡುವೆ ಇಂದು(ಡಿ.5) ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.
ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.
ಇಂದು ಸಿಂಘು ಗಡಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘಟನೆಗಳ ಮುಖಂಡರು, ಹೊಸ ಕೃಷಿ ಕಾಯಿದೆಗಳ ಬಗ್ಗೆ ನಮಗೆ ತೃಪ್ತಿ ಇಲ್ಲ. ಇತ್ತೀಚಿಗೆ ಜಾರಿಗೆ ತಂದ ಮೂರು ಕಾಯಿದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು 5ನೇ ಸುತ್ತಿನ ಮಾತುಕತೆ ನಡೆಯಲಿದ್ದು ರೈತರು ಸಿಂಘು ಗಡಿಯಲ್ಲಿ ಇಂದು ಬೆಳಗಿನ ಜಾವದಿಂದಲೇ ಪ್ರತಿಭಟನೆ ಮುಂದುವರಿಸಿದ್ದಾರೆ.
ಈ ಮಧ್ಯೆ ತಮ್ಮ ಹೋರಾಟವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಇಂದಿನ ಮಾತುಕತೆ ವಿಫಲವಾದರೆ ನಾಡಿದ್ದು ಡಿಸೆಂಬರ್ 8ರಂದು ಭಾರತ ಬಂದ್ ಗೆ ಕರೆ ನೀಡಿವೆ.
4 ಸುತ್ತಿನ ಸಮಾಲೋಚನೆಗಳೂ ವಿಫಲವಾಗಿರುವುದರಿಂದ ದೆಹಲಿ ಗಡಿಯಲ್ಲಿ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ. ಅವರ ಪ್ರತಿಭಟನೆ ಇಂದಿಗೆ 10ನೇ ದಿನಕ್ಕೆ ಕಾಲಿಟ್ಟಿದೆ. ಇದು ಕಡೆಯ ಅವಕಾಶ 5ನೇ ಸಭೆಯಲ್ಲಿ ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳಿಗೆ ಈಡೇರಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಮಂದಿ ಪ್ರತಿನಿಧಿಗಳ ನಡುವೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಗಳಲ್ಲಿ ಮಾತುಕತೆ ಯಶಸ್ವಿಯಾಗಿರಲಿಲ್ಲ.
ಇದರಿಂದ ರೈತರು ಇನ್ನಷ್ಟು ತೀವ್ರವಾಗಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಮತ್ತೊಂದು ಸುತ್ತಿನ ಸಭೆ ಕರೆದಿದೆ.
ರೈತರ ಪಾಲಿಗೆ ಮರಣಶಾಸನವಾಗಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ರೈತ ಬೆಳೆಯುವ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ರೈತರಿಗೆ ಪೂರಕವಾಗಿಲ್ಲದ ವಿದ್ಯುತ್ ಕಾಯಿದೆಯನ್ನು ಹಿಂಪಡೆಯಬೇಕು ಎಂಬವು ರೈತರ ಹಕ್ಕೊತ್ತಾಯಗಳು.












Click it and Unblock the Notifications