ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ
ನವದೆಹಲಿ, ಫೆಬ್ರವರಿ.25: ಕಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಸೋಮವಾರ ಐವರು ಮೃತಪಟ್ಟಿದ್ದರೆ, ಮಂಗಳವಾರ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಜಿಟಿಬಿ ಆಸ್ಪತ್ರೆಯ ಸೂಪರಿಟೆಂಡೆಂಟ್ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಪರ ಮತ್ತು ವಿರೋಧಿ ಪ್ರತಿಭಟನೆಯು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ದೆಹಲಿಯ ಹಲವೆಡೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ಮುಂದುವರಿದಿದೆ. ಸಂಘರ್ಷದಲ್ಲಿ ಗಾಯಗೊಂಡವರನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದೆಹಲಿಯ ಈಶಾನ್ಯ ಭಾಗದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಖಜೂರಿ ಖಾಸ್ ಪ್ರದೇಶದಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಫ್ಲಾಗ್ ಮಾರ್ಚ್ ನಡೆಸಿತು. ಮೌಜ್ ಪುರ್, ಜಫ್ರಾಬಾದ್, ಮೌಜ್ ಪುರ್ ಚೌಕ್, ಚಾಂದ್ ಬಾಗ್ ಮತ್ತು ಭಜನ್ ಪುರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ:
ದೆಹಲಿ ಈಶಾನ್ಯ ಭಾಗದ ಮೌಜ್ ಪುರ್ ನಲ್ಲಿ ವರದಿಗೆ ತೆರಳಿದ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡಿರುವ ಪತ್ರಕರ್ತನನ್ನು ದೆಹಲಿಯ ಜಿಟಿಬಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ತುರ್ತುಸಭೆ ಬಳಿಕ ಸಿಎಂ ಅರವಿಂದ್ ಕೇಜ್ರಿವಾಲ್ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡವರ ಆರೋಗ್ಯ ವಿಚಾರಿಸಿದರು.












Click it and Unblock the Notifications