ಇಂದೇ ದೆಹಲಿ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷಕ್ಕೆ ಬಹುಮತ ಪಕ್ಕಾ
ದೆಹಲಿ, ಜನವರಿ.06: ಇವತ್ತೇ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಕ್ಷವೇ ಗದ್ದುಗೆ ಹಿಡಿಯುವುದು ಪಕ್ಕಾ ಎಂದು ಚುನಾವಣಾ ಮತದಾನಪೂರ್ವ ಸಮೀಕ್ಷೆಗಳು ಹೇಳುತ್ತಿವೆ.
ದೆಹಲಿ ವಿಧಾನಸಭಾ ಚುನಾವಣೆ ಮುಹೂರ್ತ ಹೊರ ಬೀಳುತ್ತಿದ್ದಂತೆ ಐಎಎನ್ಎಸ್ ಹಾಗೂ ಸಿ-ವೋಟರ್ ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ಖಾಸಗಿ ಸಂಸ್ಥೆಗಳು ನಡೆಸಿರುವ ಮತದಾನಪೂರ್ವ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷದ ಪರ ಮತದಾರರು ಹೆಚ್ಚು ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ: ಮತದಾನ, ಫಲಿತಾಂಶದ ದಿನಾಂಕ ಪ್ರಕಟ
ದೆಹಲಿಯಲ್ಲಿ ಇಂದೇ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಇನ್ನು, ಭಾರತೀಯ ಜನತಾ ಪಕ್ಷವು 8 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನದಲ್ಲಿ ಇರಲಿದ್ದು, ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಪೊರಕೆ ಬಿಡಲ್ಲ, ಕಮಲ ಹಿಡಿಯಲ್ಲ, ಕಾಂಗ್ರೆಸ್ ನ್ನು ಕೇಳೋರಿಲ್ಲ:
ದೆಹಲಿಯ ಹೊರಭಾಗದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಹೆಸರಿದ್ದು, ಆ ಭಾಗದಲ್ಲೇ 26 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ದೆಹಲಿ ಕೇಂದ್ರ ಭಾಗದಲ್ಲಿ 17 ಹಾಗೂ ಉಳಿದಂತೆ 16 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷವು ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.
ಆಡಳಿತದ ಕೇಂದ್ರ ಭಾಗವಾಗಿರುವ ದೆಹಲಿಯಲ್ಲಿ ಕಳೆದ ನಾಲ್ಕು ದಶಕಗಳಿಂದಲೂ ಬಿಜೆಪಿ ಅಧಿಕಾರ ಹಿಡಿಯಲು ಸರ್ಕಸ್ ಮಾಡುತ್ತಲೇ ಬಂದಿದೆ. ಆದರೆ, ಇದುವರೆಗೂ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಏರಲು ಸಾಧ್ಯವಾಗಿಲ್ಲ. ಅಲ್ಲದೇ ಇತ್ತೀಚಿಗೆ ನಡೆದ ಎಲ್ಲ ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ಮುಖಭಂಗ ಅನುಭವಿಸಿದೆ.
ಕೆಲವಡೆ ಹೆಚ್ಚು ಸ್ಥಾನಗಳನ್ನು ಗಳಿಸಿದರೂ ಕೂಡಾ ಅಧಿಕಾರ ಹಿಡಿಯುವಲ್ಲಿ ಸೋತಿದೆ. ಹೀಗಾಗಿ ದೆಹಲಿ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದರು. ಪ್ರಸ್ತುತ ದೆಹಲಿ ಸರ್ಕಾರದ ಅವಧಿಯು ಫೆ. 22ಕ್ಕೆ ಅಂತ್ಯಗೊಳ್ಳಲಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬರಲಿದೆ. ಜ. 14ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಫೆ. 11ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.