Breaking: ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ಯಶ್ವಂತ್ ಸಿನ್ಹಾ ಬೆಂಬಲಕ್ಕೆ ನಿಂತ ಎಎಪಿ
ನವದೆಹಲಿ: ದೇಶದಲ್ಲಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಇಂದು ಶನಿವಾರ ಹೇಳಿದೆ.
ದೇಶದಲ್ಲಿ ರಾಷ್ಟ್ರಪತಿ ಚುನಾವಣಾ ಕಣ ಗರಿಗೆದರಿದ್ದು, ಅಭ್ಯರ್ಥಿಗಳು ತೆರೆಮರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಎನ್ಡಿಎ ಪಕ್ಷದಿಂದ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುಗೆ ಈಗಾಗಲೇ ಹಲವು ಪಕ್ಷಗಳು ಬೆಂಬಲ ಸೂಚಿಸಿದ್ದವು.
ಇದೀಗ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ಎಎಪಿ ಬಹಿರಂಗಪಡಿಸಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಾವು ಯಶವಂತ್ ಸಿನ್ಹಾ ಅವರಿಗೆ ಮತ ಹಾಕುತ್ತೇವೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.
ಎಎಪಿ ಜೊತೆಗೆ, ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ಎಸ್ ಕೂಡ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಸಿನ್ಹಾ ಅವರಿಗೆ ಬೆಂಬಲವನ್ನು ಕೊಡುವುದಾಗಿ ಸೂಚನೆ ನೀಡಿದೆ. ಹೀಗೆ ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲಲು ಸಾಕಷ್ಟು ಕಸರತ್ತುಗಳು ನಡೆಯುತ್ತಿವೆ.