ಬೆತ್ತ ಅಲ್ಲವೇ ಅಲ್ಲ; ದೆಹಲಿ ಪೊಲೀಸರ ಕೈಗೆ ಕಬ್ಬಿಣದ ಲಾಠಿ!
ನವದೆಹಲಿ, ಫೆಬ್ರವರಿ.02: ಹಿಂಸಾಚಾರ, ಉಗ್ರ ಪ್ರತಿಭಟನಾ ಸ್ಥಳಗಳಲ್ಲಿ ಉದ್ರಿಕ್ತರ ಗುಂಪಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕಾಗಿ ನವದೆಹಲಿಯಲ್ಲಿ ಆರಕ್ಷಕರಿಗೆ ಹೊಸ ಬಗೆಯ ರಕ್ಷಾ ಕವಚವನ್ನು ನೀಡಲಾಗಿದೆ.
ಶಹದಾರ್ ಜಿಲ್ಲೆಯಲ್ಲಿ ಪೊಲೀಸರಿಗೆ ಕಬ್ಬಿಣದಿಂದ ಮಾಡಿರುವ ಲಾಠಿಗಳ ಜೊತೆಗೆ ತಲೆಗೆ ಧರಿಸುವುದಕ್ಕಾಗಿ ಹೆಲ್ಮೆಟ್ ಗಳನ್ನು ನೀಡಲಾಗಿದೆ. ಕಬ್ಬಿಣದ ಲಾಠಿ ಹಿಡಿದು ರಸ್ತೆಯ ಬದಿಯಲ್ಲಿ ಪೊಲೀಸರು ನಿಂತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.
ಸಾಮಾನ್ಯವಾಗಿ ಪ್ರತಿಭಟನೆಗಳು ಹಿಂಸಾತ್ಮಕ ರೂಪಕ್ಕೆ ತಿರುಗಿದ ಸಂದರ್ಭದಲ್ಲಿ ಪೊಲೀಸರ ಆತ್ಮರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ತೀಕ್ಷ್ಣ ಆಯುಧಗಳಿಂದ ಹಲ್ಲೆಗೆ ಮುಂದಾಗುವ ಉದ್ರಕ್ತರಿಂದ ಆರಕ್ಷಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಎನಿಸಿರುವ ಆಯುಧವನ್ನು ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಒಂದು ಪೊಲೀಸ್ ಠಾಣೆಗೆ 12 ಕಬ್ಬಿಣದ ಲಾಠಿ
ಶಹದಾರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 11 ಪೊಲೀಸ್ ಠಾಣೆಗಳು ಬರುತ್ತದೆ. ಈ ಎಲ್ಲ ಠಾಣೆಗಳ ಸಿಬ್ಬಂದಿಗೆ ಕಬ್ಬಿಣದ ಲಾಠಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಂದು ಪೊಲೀಸ್
ಠಾಣೆಗೆ 12 ಕಬ್ಬಿಣದ ಲಾಠಿಗಳನ್ನು ನೀಡಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ಮಾಹಿತಿ ನೀಡಿದ್ದಾರೆ.

ಪೊಲೀಸರಿಗೆ ಕಬ್ಬಿಣದ ಲಾಠಿ ನೀಡುವುದಕ್ಕೆ ಕಾರಣ?
ಯಾವುದೇ ಕತ್ತಿ, ಖಡ್ಗ ಅಥವಾ ತೀಕ್ಷ್ಣ-ಅಂಚಿನ ಆಯುಧಗಳಿಂದ ನಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸುವುದಕ್ಕೆ ಮುಂದಾದ ಸಂದರ್ಭದಲ್ಲಿ ನಮ್ಮ ಸಿಬ್ಬಂದಿಯ ಆತ್ಮರಕ್ಷಣೆ ಉದ್ದೇಶದಿಂದ ಈ ಕಬ್ಬಿಣದ ಲಾಠಿಯನ್ನು ನೀಡಲಾಗುತ್ತಿದೆ. ಇದರಿಂದ ಆರಕ್ಷಕರ ಆತ್ಮರಕ್ಷಣೆಗೂ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇರಿಸಿದ ಶಹದಾರ್ ಸ್ಟೇಷನ್ ಹೌಸ್ ಆಫೀಸರ್ ಅವರಿಗೆ ಜಿಲ್ಲೆಯ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.

ಹಿಂಸಾತ್ಮಕ ರೂಪಕ್ಕೆ ತಿರುಗಿದ್ದ ರೈತರ ಹೋರಾಟ
ಕಳೆದ ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟವು ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆಯಿತು. ಪ್ರತಿಭಟನಾನಿರತರಲ್ಲಿ ಕೆಲವರು ಖಡ್ಗ, ಕತ್ತಿ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ ಘಟನೆ ನಡೆದಿತ್ತು. ಪ್ರತಿಭಟನಾಕಾರರ ಇನ್ನೊಂದು ಗುಂಪು ದೆಹಲಿ ಕೆಂಪುಕೋಟೆಯನ್ನು ನುಗ್ಗಿ ರಾಷ್ಟ್ರ ಧ್ವಜದ ಎದುರಿಗೆ ಸಿಖ್ ಧ್ವಜವನ್ನು ಹಾರಿಸಿತು.

ಪ್ರತಿಭಟನೆ ನಡೆಸಿದ 37 ಜನರ ವಿರುದ್ಧ ಕೇಸ್
ಚಾರಕ್ಕೆ ಸಂಬಂಧಿಸಿದಂತೆ 37 ರೈತ ಮುಖಂಡರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಕೇಶ್ ತಿಕೈಟ್, ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್, ದರ್ಶನ್ ಪಾಲ್, ಗುರ್ನಾಮ್ ಸಿಂಗ್ ಚಾಂದುನಿ, ಕುಲ್ವಂತ್ ಸಿಂಗ್ ಸಂಧು, ಸತ್ನಾಮ್ ಸಿಂಗ್ ಪನ್ನು, ಜೋಗಿಂದರ್ ಸಿಂಗ್ ಉಗ್ರಹಾ, ಸರ್ಜಿತ್ ಸಿಂಗ್ ಫೂಲ್, ಜಗಜೀತ್ ಸಿಂಗ್ ದಾಲೇವಾಲ್, ಬಲ್ಬೀರ್ ಸಿಂಗ್ ರಾಜೇವಾಲ್, ಹರೀಂದರ್ ಸಿಂಗ್ ಲಖೇವಾಲ್ ಎಂಬ ರೈತ ಮುಖಂಡರ ಹೆಸರು ಸೇರಿಸಲಾಗಿದೆ. ಒಟ್ಟು 37 ರೈತ ಮುಖಂಡರ ವಿರುದ್ಧ ಕೊಲೆ ಯತ್ನ, ಗಲಭೆ ಮತ್ತು ಪಿತೂರಿ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇಂದು, ನಿನ್ನೆಯದ್ದಲ್ಲೇ ರೈತರ ಹೋರಾಟ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ನವೆಂಬರ್.26ರಿಂದಲೂ ಕೇಂದ್ರ ಸರ್ಕಾರದ ಹೊಸ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ.












Click it and Unblock the Notifications