ಸಂಸದ ಅಸಾದುದ್ದೀನ್ ಓವೈಸಿ ಮನೆ ಧ್ವಂಸ ಪ್ರಕರಣ: ಐವರು ಆರೋಪಿಗಳ ಬಂಧನ
ನವದೆಹಲಿ, ಸೆಪ್ಟೆಂಬರ್ 22: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗೆ ಸೇರಿದವರು ಎನ್ನಲಾದ ಐವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಸಂಜೆ ವೇಳೆಗೆ ನವೆದಹಲಿಯ ಅಶೋಕ ರಸ್ತೆಯಲ್ಲಿರುವ ಸಂಸದ ಅಸಾದುದ್ದೀನ್ ಓವೈಸಿಯವರಿಗೆ ಸೇರಿದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓವೈಸಿ, ದುಷ್ಕರ್ಮಿಗಳ ತಂಡವು ಕೋಮು ಘೋಷಣೆಗಳನ್ನು ಕೂಗುತ್ತಿದ್ದು, ತಮಗೆ ಜೀವ ಬೆದರಿಕೆ ಹಾಕಿದೆ ಎಂದು ಹೇಳಿದ್ದಾರೆ.
ಅಸಾದುದ್ದೀನ್ ಓವೈಸಿಯನ್ನು 'ವೈರಸ್' ಎಂದು ಉದ್ಗರಿಸಿದ ಬಿಜೆಪಿ ಮುಖಂಡ
ದೇಶದಲ್ಲಿ "ಸಂಸದರ ಮನೆಯೇ ಸುರಕ್ಷಿತವಾಗಿಲ್ಲದಿದ್ದರೆ, ಅಮಿತ್ ಶಾ ಇದರಿಂದ ಯಾವ ರೀತಿಯ ಸಂದೇಶವನ್ನು ರವಾನಿಸುತ್ತಿದ್ದಾರೆ?" ಅಸಾದುದ್ದೀನ್ ಓವೈಸಿ ತಮ್ಮ ಟ್ವಿಟರ್ನಲ್ಲಿ ಕೇಂದ್ರ ಗೃಹ ಸಚಿವರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.
ಐವರು ಆರೋಪಿಗಳನ್ನು ಬಂಧಿಸಿದ ದೆಹಲಿ ಪೊಲೀಸ್:
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದೀಪಕ್ ಯಾದವ್ ಹೇಳಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ಮುಂದುವರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.