ಅಲೋಕ್ ವರ್ಮಾ ಪ್ರಕರಣ: ಆಯ್ಕೆ ಸಮಿತಿಯಲ್ಲಿ ಸಿಕ್ರಿ, ಮೋದಿ, ಖರ್ಗೆ
ನವದೆಹಲಿ, ಜನವರಿ 09: ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿರುವ ಆಯ್ಕೆ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ ಕೆ ಸಿಕ್ರಿ, ಪ್ರಧಾನಿ ನರೇಂದ್ರ ಮೊದಿ ಮತ್ತು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿರಲಿದ್ದಾರೆ.
ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆಯೂ ಸಮಿತಿ ವಿಚಾರಣೆ ನಡೆಸಲಿದ್ದು, ಅಲೋಕ್ ವರ್ಮಾ ಅವರನ್ನು ವಜಾಗೊಳಿಸಬೇಕೋ, ಬೇಡವೋ ಎಂಬ ಬಗ್ಗೆಯೂ ಸಮಿತಿಯೇ ನಿರ್ಧಾರ ತೆಗೆದುಕೊಳ್ಳಲಿದೆ.
ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕೇಂದ್ರ ಸರ್ಕಾರ ಕಳಿಸಿತ್ತು. ಆದರೆ ಸಿಬಿಐ ಯಲ್ಲಿ ಆಯಕಟ್ಟಿನ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ಕಳಿಸುವ ಅಥವಾ ವಜಾ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲ. ಅಂಥ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಮತ್ತು ವಿರೋಧಪಕ್ಷದ ನಾಯಕ ಮತ್ತು ಪ್ರಧಾನಿಯವರನ್ನು ಒಳಗೊಂಡ ಆಯ್ಕೆ ಸಮಿತಿಯ ನಿರ್ಣಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

ಆ ಕಾರಣದಿಂದ ಇದೀಗ ಆಯ್ಕೆ ಸಮಿತಿ ಇನ್ನೊಂದು ವಾರದೊಳಗೆ ತನ್ನ ನಿಲುವನ್ನು ತಿಳಿಸಲಿದೆ.
ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಕ್ರಮ ತಪ್ಪು ಎಂದು ಮಂಗಳವಾರವಷ್ಟೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಅವರು ಮತ್ತೆ ತಮ್ಮ ಹುದ್ದೆಯಲ್ಲೇ ಮುಂದುವರಿಯಬಹುದು ಎಂದಿತ್ತು. ಇಂದಿನಿಂದ ವರ್ಮಾ ಮತ್ತೆ ಅಧಿಕಾರ ವಹಿಸಿಕೊಂಡಿದ್ದು, ಮುಂದಿನ ತಿಂಗಳು(ಫೆಬ್ರವರಿ) ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
ಸಿಜೆಐ ಹೊರಗುಳಿದಿದ್ದು ಏಕೆ?
ಆಯ್ಕೆ ಸಮಿತಿಯಲ್ಲಿ ವಿಪಕ್ಷ ನಾಯಕ ಮತ್ತು ಪ್ರಧಾನಿ ಅವರೊಂದಿಗೆ ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ಇರಬೇಕಾಗುತ್ತದೆ. ಆದರೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಯುವಂತೆ ತೀರ್ಪು ನೀಡಿದ ನ್ಯಾಯಪೀಠದಲ್ಲಿ ಇದ್ದಿದ್ದರಿಂದ ಅವರೇ ಸ್ವತಃ ಆಯ್ಕೆ ಸಮಿತಿಯಿಂದ ಹೊರಗುಳಿದಿದ್ದಾರೆ. ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರದ ನಿರ್ಧಾರ ತಪ್ಪು ಎಂದು ಈ ಪೀಠ ಹೇಳಿತ್ತು.












Click it and Unblock the Notifications