"ಹಬ್ಬದ ಖುಷಿಯಲ್ಲಿ ಮಾಸ್ಕ್ ಮರೆತರೆ ಅಪಾಯ ತಪ್ಪಿದ್ದಲ್ಲ"
ನವದೆಹಲಿ, ಅಕ್ಟೋಬರ್.08: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೇ ದೇಶಾದ್ಯಂತ ಸಾಲು ಸಾಲು ಹಬ್ಬಗಳು ಎದುರಾಗಿದೆ. ಹಬ್ಬ ಆಚರಣೆಯ ಖುಷಿಯಲ್ಲಿ ಯಾವುದೇ ಕಾರಣಕ್ಕೂ ಮೈ ಮರೆಯುವುದು ಬೇಡ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಎಚ್ಚರಿಕೆ ನೀಡಿದ್ದಾರೆ.
ದೇಶಾದ್ಯಂತ ದಸರಾ, ದುರ್ಗಾ ಪೂಜೆ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿ. ಆದರೆ ಇದರ ಸಂಭ್ರಮದಲ್ಲಿ ಮಾಸ್ಕ್ ಗಳನ್ನು ಮರೆಯುವುದು ಬೇಡ. ಹಬ್ಬದ ನಡುವೆಯೂ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು.
ಭಾರತ; 24 ಗಂಟೆಯಲ್ಲಿ 78,524 ಹೊಸ ಕೋವಿಡ್ ಪ್ರಕರಣ
ಸಾರ್ವಜನಿಕರು ಮಾಸ್ಕ್ ಧರಿಸುವ ರೀತಿ ಕೂಡಾ ಇಲ್ಲಿ ಬಹುಮುಖ್ಯವಾಗಿರುತ್ತದೆ. ಸರಿಯಾಗಿ ಮೂಗು ಮುಚ್ಚಿಕೊಳ್ಳುವಂತೆ ಮಾಸ್ಕ್ ಗಳನ್ನು ಧರಿಸುವುದು ಹೆಚ್ಚು ಸುರಕ್ಷಿತವಾಗಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಿಂಗ್ ಸಲಹೆ ನೀಡಿದ್ದಾರೆ.
ಸಾಮಾಜಿಕ ಅಂತರದ ಬಗ್ಗೆ ಗಮನವಿರಲಿ:
ಭಾರತದಲ್ಲಿ ಹಬ್ಬವನ್ನು ಆಚರಿಸುವುದಕ್ಕೆ ಮುಕ್ತ ಅವಕಾಶವನ್ನು ನೀಡಲಾಗುತ್ತದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಹೀಗಿದ್ದರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ತುರ್ತು ಅಗತ್ಯವಾಗಿದೆ. ಮುಖಕ್ಕೆ ಮಾಸ್ಕ್ ಧರಿಸುವುದರ ಜೊತೆಗೆ ಕೈಗಳಿಗೆ ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರಾ ಅಗತ್ಯ ಎನಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 78524 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 68,35,656ಕ್ಕೆ ಏರಿಕೆಯಾಗಿದೆ. ದೇಶದ್ಯಂತ 58,27,705 ಸೋಂಕಿತರು ಗುಣಮುಖರಾಗಿದ್ದು, 9,02,425 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.