"ಸಾರ್ವಜನಿಕ ರಸ್ತೆ ಬಂದ್ ಮಾಡುವುದ್ದಕ್ಕೆ ಅನುಮತಿ ಕೊಟ್ಟಿದ್ದು ಯಾರು?"
ನವದೆಹಲಿ, ಫೆಬ್ರವರಿ.10: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನೋಂದಣಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಿತು.
ನವದೆಹಲಿಯ ಶಾಹಿನ್ ಬಾಗ್ ರಸ್ತೆಯನ್ನು ಪೂರ್ವಾನುಮತಿ ಇಲ್ಲದೇ ಅನಿರ್ದಿಷ್ಟಾವಧಿಗೆ ಬಂದ್ ಮಾಡುವುದಕ್ಕೆ ನಿಮಗೆ ಅನುಮತಿ ಕೊಟ್ಟಿದ್ದು ಯಾರು ಎಂದು ಸುಪ್ರೀಂಕೋರ್ಟ್ ಪ್ರತಿಭಟನಾಕಾರರನ್ನು ಪ್ರಶ್ನೆ ಮಾಡಿದೆ.
ದೆಹಲಿ ಮತದಾನ ಮುನ್ನ ದಿನ ಇದೆಲ್ಲಾ ಬೇಕಿತ್ತಾ ಎಂದ ಸುಪ್ರೀಂಕೋರ್ಟ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇರುತ್ತದೆ. ಅದಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವಂತೆ ಸಾರ್ವಜನಿಕ ಪ್ರದೇಶವನ್ನು ಬಳಸಿಕೊಳ್ಳುವುದು ತರವಲ್ಲ ಎಂದು ಕೋರ್ಟ್ ಹೇಳಿದೆ.
ಸುಪ್ರೀಂಕೋರ್ಟ್ ನಲ್ಲಿ ಫೆಬ್ರವರಿ.17 ಮುಂದಿನ ವಿಚಾರಣೆ
ಕೇಂದ್ರ ಸರ್ಕಾರವು ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನವದಹೆಲಿಯ ದಕ್ಷಿಣ ಭಾಗದ ಶಾಹಿನ್ ಬಾಗ್ ನಲ್ಲಿ ಕಳೆದ ಎರಡು ತಿಂಗಳಿಂದಲೂ ಉಗ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸೋಮವಾರ ಅರ್ಜಿ ಪರಿಶೀಲನೆ ನಡೆಸಿದ ಕೋರ್ಟ್, ಫೆಬ್ರವರಿ.17ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದೆ.
ದೆಹಲಿ ಸರ್ಕಾರ, ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚನೆ
ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಹಾಗೂ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಸಾರ್ವಜನಿಕ ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತೆರವಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ಉತ್ತರ ನೀಡುವಂತೆ ಕೋರ್ಟ್ ಸೂಚಿಸಿದೆ.
ದೆಹಲಿ ಮತದಾನದ ನಂತರ ವಿಚಾರಣೆ ಎಂದಿದ್ದ ಕೋರ್ಟ್
ಶುಕ್ರವಾರ ಅರ್ಜಿ ಕುರಿತು ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ನೇತೃತ್ವದ ವಿಭಾಗೀಯ ಪೀಠ ಈ ವಿಚಾರಣೆ ನಡೆಸಿತ್ತು. ಫೆಬ್ರವರಿ.08ರ ಶನಿವಾರ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇದರ ಮುನ್ನ ದಿನ ಶಾಹಿನ್ ಬಾಗ್ ಪ್ರತಿಭಟನೆ ವಿರುದ್ಧ ಅರ್ಜಿ ಸಲ್ಲಿಸುವುದರ ಉದ್ದೇಶ ಏನು. ಈಗ ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿದೆಯೇ, ಮುಂದಿನ ವಾರ ವಿಚಾರಣೆ ನಡೆಸಿದರೆ ಆಗುವುದಿಲ್ಲವೇ ಎಂದು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಪ್ರಶ್ನೆ ಮಾಡಿತ್ತು.
ಶಾಹಿನ್ ಬಾಗ್ ಹೋರಾಟ ಪ್ರಶ್ನಿಸಿ ವಕೀಲರಿಂದ ಅರ್ಜಿ
ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಶಾಹಿನ್ ಬಾಗ್ ನಲ್ಲಿ ಕಳೆದ ಡಿಸೆಂಬರ್.15ರಿಂದರೂ ಉಗ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಕಲಿಂದ್ ಕುಂಜ್ ಮತ್ತು ಶಾಹಿನ್ ಬಾಗ್ ನಡುವಿನ ಸಂಪರ್ಕವೇ ಬಂದ್ ಆಗಿದೆ. ಹೀಗಾಗಿ ವಾಹನ ಸವಾರರು ನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಜಿದಾರ ಅಮಿತ್ ಸಹಾನಿ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಹೋರಾಟದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸ್ಪಷ್ಟವಾಗಿ ತಿಳಿಯುತ್ತದೆ. ಸಾರ್ವಜನಿಕರ ತೊಂದರೆ ಬಗೆಹರಿಸುವ ನಿಟ್ಟಿನಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ ಎಂದು ಸುಪ್ರೀಂಕೋರ್ಟ್ ತಿಳಿಸಿತ್ತು.