ಸರಕಾರಿ ಗೌರವದೊಂದಿಗೆ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ
ನವದೆಹಲಿ, ಅಗಸ್ಟ್ 25: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆ ಭಾನುವಾರ ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಿತು. ಸಕಲ ಸರಕಾರಿ ಗೌರವದೊಂದಿಗೆ ನಡೆದ ಅಂತ್ಯಕ್ರಿಯೆಯಲ್ಲಿ ವಿವಿಧ ಪಕ್ಷಗಳು ನಾಯಕರು, ಜೇಟ್ಲಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೇಟ್ಲಿ ಅವರ ಮಗ ರೋಹನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.
ಆಗಸ್ಟ್ ಇಪ್ಪತ್ತಾಲ್ಕನೇ ತಾರೀಕಿನ ಶನಿವಾರದಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ಅರುಣ್ ಜೇಟ್ಲಿ (66) ಅವರು ನವದೆಹಲಿಯಲ್ಲಿ ಇರುವ ಏಮ್ಸ್ ನಲ್ಲಿ ನಿಧನರಾಗಿದ್ದರು.
Recommended Video
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಎಲ್. ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್, ಕಾಂಗ್ರೆಸ್ ನಾಯಕರಾದ ಜ್ಯೋತಿರಾದಿತ್ಯ ಸಿಂಧಿಯಾ, ಕಪಿಲ್ ಸಿಬಲ್ ಮತ್ತಿತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಬಿಹಾರ, ಉತ್ತರಾಖಂಡದ ಮುಖ್ಯಮಂತ್ರಿಗಳು ಸಹ ಭಾಗಿ ಆಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರವನ್ನು ಬಿಜೆಪಿ ಕೇಂದ್ರ ಕಚೇರಿಗೆ ತೆಗೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಯಮುನಾ ನದಿಯ ದಡದಲ್ಲಿ ಇರುವ ನಿಗಮ್ ಬೋಧ್ ಘಾಟ್ ಗೆ ತರಲಾಯಿತು.












Click it and Unblock the Notifications