ಫೆ.14ರಂದು ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ
ನವದೆಹಲಿ, ಫೆ. 10 : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲವು ದಾಖಲಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಫೆಬ್ರವರಿ 14ರಂದು ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಅಚ್ಚರಿಯ ವಿಷಯವೆಂದರೆ ಫೆ.14ರಂದೇ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮಂಗಳವಾರ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದ ಆಮ್ ಆದ್ಮಿ ಪಕ್ಷದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂ 36. ಆಮ್ ಆದ್ಮಿ ಪಕ್ಷ 67 ಸ್ಥಾನಗಳಲ್ಲಿ ಜಯಗಳಿಸಿದೆ. [ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ Live]

ಇಂದು ಸಂಜೆ ನಡೆಯಲಿರುವ ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಶಾಸಕಾಂಗ ನಾಯಕರಾಗಿ ಆಯ್ಕೆಯಾಗಲಿದ್ದಾರೆ. ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಫೆ.14ರಂದು ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. [ಭ್ರಷ್ಟಾಚಾರ ವಿರುದ್ಧ ಹೋರಾಡಿ, ಕೇಜ್ರಿಗೆ ಅಣ್ಣಾ ಕಿವಿಮಾತು]
ಕೇಜ್ರಿವಾಲ್ ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ ರಾಮ್ಲೀಲಾ ಮೈದಾನದಲ್ಲಿಯೇ ಪ್ರಮಾಣವಚನ ಸಮಾರಂಭ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಆಪ್ ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. [ಚಿತ್ರಗಳಲ್ಲಿ: ನೆಲಕಚ್ಚಿದ ಕಮಲ, ಎಎಪಿಗೆ ಅಭೂತಪೂರ್ವ ಜಯ]
ಫೆ.14ರಂದೇ ರಾಜೀನಾಮೆ : ಅಚ್ಚರಿಯ ವಿಷಯವೆಂದರೆ ವಿಧಾನಸಭೆಯಲ್ಲಿ ಜನ ಲೋಕಪಾಲ ಮಸೂದೆ ಮಂಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು 2014ರ ಫೆ.14ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂಲಕ ಆಮ್ ಆದ್ಮಿ ಪಕ್ಷದ 49 ದಿನಗಳ ಆಡಳಿತ ಅಂತ್ಯಗೊಂಡಿತ್ತು.












Click it and Unblock the Notifications