ಹಿರಿಯ ಅಧಿಕಾರಿಗಳೊಂದಿಗೆ ಅಮಿತ್ ಶಾ ತುರ್ತು ಸಭೆ
ನವದೆಹಲಿ, ನವೆಂಬರ್ 9: ಶನಿವಾರ ಅಯೋಧ್ಯಾ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವ ಸಂಬಂಧ ಗೃಹ ಸಚಿವ ಅಮಿತ್ ಶಾ, ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ತಮ್ಮ ನಿವಾಸದಲ್ಲಿ ಅತ್ಯುನ್ನತ ಭದ್ರತಾ ಸಭೆ ಕರೆದ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ಧೋವಲ್, ಗುಪ್ತಚರ ಬ್ಯೂರೋದ ಮುಖ್ಯಸ್ಥ ಅರವಿಂದ್ ಕುಮಾರ್ ಮತ್ತು ಇತರೆ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.
ವಿವಾದಿತ ಸ್ಥಳವನ್ನು ಸುರಕ್ಷಿತವಾಗಿ ಇರಿಸುವುದು ನಮ್ಮ ಮೊದಲ ಆದ್ಯತೆ. ಅದಕ್ಕಾಗಿ ನಾವು ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ನಗರದಲ್ಲಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ನಗರದಲ್ಲಿ ಎಲ್ಲವೂ ಸಹಜ ಸ್ಥಿತಿಯಲ್ಲಿದೆ. ನಕಾರಾತ್ಮಕ ವಿಚಾರಗಳನ್ನು ಹರಡುವವರ ಮೇಲೆ ನಿಗಾ ಇರಿಸಿದ್ದೇವೆ ಎಂದು ಅಯೋಧ್ಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಬೇಡಿ. ಎಲ್ಲ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇರಿಸಿದ್ದು, ಸುಳ್ಳು ಹಾಗೂ ಪ್ರಚೋದನಾಕಾರಿ ಸಂದೇಶಗಳನ್ನು ರವಾನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಪ್ರತಿ ಜಿಲ್ಲೆಯಲ್ಲಿಯೂ ತಾತ್ಕಾಲಿಕ ಜೈಲುಗಳನ್ನು ತೆರೆಯಲಾಗಿದೆ. ಅಯೋಧ್ಯಾದಲ್ಲಿ ಭಾರಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.












Click it and Unblock the Notifications