ಸಿಗರೇಟ್ ನಿಷೇಧ : ಎಲ್ಲರಿಗೂ ಕೋರ್ಟ್ ನೋಟಿಸ್
ನವದೆಹಲಿ, ಆ.14 : ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳನ್ನು ದೇಶಾದ್ಯಂತ ನಿಷೇಧಿಸುವ ಪ್ರಸ್ತಾಪ ಕೇಳಿಬಂದಿದೆ. ಈ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ಗೆ ಚಿತ್ರ ನಿರ್ಮಾಪಕ ಸುನೀಲ್ ರಾಜ್ಪಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಆರ್.ಎಂ.ಲೋಧಾ ಅವರ ಪೀಠ, ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೇಂದ್ರ ಸರ್ಕಾರ, ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿತು.

ನಿರ್ಮಾಪಕ ರಾಜ್ಪಾಲ್ ಅವರು ತಮ್ಮ ಅರ್ಜಿಯಲ್ಲಿ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿರುವ ರೋಗಗಳನ್ನು ಗುಣಪಡಿಸಲು ವಾರ್ಷಿಕವಾಗಿ 30 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಆದ್ದರಿಂದ ತಂಬಾಕು ಉತ್ಪನ್ನಗಳನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. [ಸಿಗರೇಟು ಸೇವನೆ ಇನ್ಮುಂದೆ ಜೇಬಿಗೂ ಹಾನಿಕರ]
ತಂಬಾಕು ಉತ್ಪನ್ನಗಳ ನಿಷೇಧ ಕಾಯ್ದೆ 2003ರ ಸೆಕ್ಷನ್-4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ 200ರೂ. ದಂಡ, ಸೆಕ್ಷನ್-5 ಪ್ರಕಾರ ಸಿಗರೇಟ್ ಅಥವಾ ಹೊಗೆಸೊಪ್ಪು ಕುರಿತು ಜಾಹಿರಾತುಗಳನ್ನು ನಿಷೇಧಿಸಲಾಗಿದೆ.
ಸೆಕ್ಷನ್-6 ಪ್ರಕಾರ ಸಿಗರೇಟ್ ಅಥವಾ ಹೊಗೆಸೊಪ್ಪು ಉತ್ಪನ್ನಗಳನ್ನು 18 ವರ್ಷದೊಳಗಿನ ವಯಸ್ಸಿನವರಿಗೆ ಮಾರುವುದು, ಶಾಲಾ ಕಾಲೇಜುಗಳ 100 ಮೀಟರ್ ಸುತ್ತಮುತ್ತ ಸಿಗರೇಟ್, ಹೊಗೆಸೊಪ್ಪು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ 200ರೂ.ದಂಡ ವಿಧಿಸಲಾಗುತ್ತದೆ ಎಂಬ ಕಾನೂನು ಇದೆ. ಆದರೆ, ಇದು ಕಟ್ಟುನಿಟ್ಟಾಗಿ ಜಾರಿಗೆ ಬಂದಿಲ್ಲ ಎಂದು ಅರ್ಜಿಯ ವಿಚಾರಣೆ ವೇಳೆ ರಾಜ್ಪಾಲ್ ಪರ ವಕೀಲರು ವಾದ ಮಂಡಿಸಿದ್ದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ದೇಶದಲ್ಲಿ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿಗೊಳಿಸಿತು.












Click it and Unblock the Notifications