ಭ್ರಷ್ಟಾಚಾರ ಮುಕ್ತ ಅಸ್ಸಾಂ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾನ
ದಿಸ್ಪುರ್, ಜನವರಿ.24: ಅಸ್ಸಾಂ ವಿಧಾನಸಭಾ ಚುನಾವಣೆ-2021ರ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ಪ್ರಚಾರ ನಡೆಸಿದ್ದಾರೆ. ಒಂದು ವರ್ಷದ ಹಿಂದೆಯಷ್ಟೇ ಬೋಡೋಲ್ಯಾಂಡ್ ಪ್ರಾದೇಶಿಕ ಒಪ್ಪಂದದ ಮೂಲಕ ಪ್ರಾದೇಶಿಕ ಬಂಡಾಯಕ್ಕೆ ತೆರೆ ಎಳೆಯುವ ಕಾರ್ಯ ನಡೆಸಲಾಗಿತ್ತು ಎಂದು ಹೇಳಿದ್ದಾರೆ.
"ಬೋಡೋಲ್ಯಾಂಡ್ ಪ್ರಾದೇಶಿಕ ಒಪ್ಪಂದದ ಅಡಿಯಲ್ಲಿ ಎಲ್ಲಾ ಷರತ್ತುಗಳನ್ನು ಪೂರೈಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಬದ್ಧವಾಗಿದೆ. ಈ ಬಗ್ಗೆ ಮತ್ತೊಮ್ಮೆ ಹೇಳುವುದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ಇದು ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ. ಪ್ರಾದೇಶಿಕ ಬಂಡಾಯಕ್ಕೆ ತೆರೆ ಎಳೆದು ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ಚುನಾವಣೆ: ನಾಗರಿಕ ನೋಂದಣಿಯಲ್ಲಿ ಹೆಸರಿಲ್ಲದಿದ್ದರೂ ಮತದಾನ
ಅಸ್ಸಾಂನಲ್ಲಿ ಈ ಹಿಂದಿನ ಸರ್ಕಾರಗಳು ಕೂಡಾ ಸಾಕಷ್ಟು ಆಶ್ವಾಸನೆಗಳನ್ನು ನೀಡಿದ್ದವು. ಪ್ರಾದೇಶಿಕ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಹಲವು ಒಪ್ಪಂದಗಳಿಗೂ ಅಂಕಿತ ಹಾಕಿದ್ದವು. ಆದರೆ ಯಾವ ಸರ್ಕಾರ ಕೂಡಾ ಕೊಟ್ಟ ಭರವಸೆಗಳನ್ನು ಈಡೇರಿಸಿರಲಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಒಂದು ಲಕ್ಷ ಮಂದಿಗೆ ಭೂಮಿ ಪತ್ರ:
ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ ರಾಜಕೀಯದ ಮೂಲಭೂತ ಹಕ್ಕು, ಸಾಂಸ್ಕೃತಿಕ ಹಕ್ಕುಗಳ ಸಂರಕ್ಷಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ 1 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಭೂಮಿ ಪತ್ರವನ್ನು ನೀಡಿದ್ದಾರೆ. ರಾಜ್ಯ ಸರ್ಕಾರವು ಬೋಡೋ ಅಸೋಸಿಯೇಷನ್ ಸ್ಥಾಪಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಸ್ಸಾಂ ರಾಜ್ಯವನ್ನು ಭ್ರಷ್ಟಾಚಾರ ಮುಕ್ತ, ಭಯೋತ್ಪಾದನಾ ಮುಕ್ತ ಮತ್ತು ಮಾಲಿನ್ಯಮುಕ್ತವಾಗಿಸಲು ಸಾಧ್ಯವಾಗುತ್ತದೆ. ರಾಜ್ಯದ ಎಲ್ಲಾ ಸಮುದಾಯಗಳಲ್ಲಿ ಶ್ರೀಮಂತ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ" ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದರು.
ಅಸ್ಸಾಂನಲ್ಲಿ ಪ್ರಸ್ತುತ ಸರ್ಕಾರದ ಅವಧಿಯು 2021ರ ಮೇ ತಿಂಗಳಿಗೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ 126 ವಿಧಾನಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗವು ಸಿದ್ಧತೆ ನಡೆಸುತ್ತಿದೆ.