ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಿಸಿದ ಬಿಜೆಪಿ ಭೀಷ್ಮ
ನವದೆಹಲಿ, ಸಪ್ಟೆಂಬರ್.30: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ ಐತಿಹಾಸಿಕ ತೀರ್ಪನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಹೇಳಿದ್ದಾರೆ.
28 ವರ್ಷದ ನಂತರ ಹೊರ ಬಂದ ಐತಿಹಾಸಿಕ ತೀರ್ಪು 1992ರಲ್ಲಿ ನಡೆದ ರಾಮ ಜನ್ಮಭೂಮಿ ಚಳುವಳಿ, ನನ್ನ ವೈಯಕ್ತಿಕ ಹಾಗೂ ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ ಎಂದು ಎಲ್.ಕೆ. ಅಡ್ವಾಣಿ ಸಂತಸ ವ್ಯಕ್ತಪಡಿಸಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟ, ಅಡ್ವಾಣಿಗೆ ಖುಲಾಸೆ
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್ ಕೆ ಯಾದವ್ ಐತಿಹಾಸಿಕ ತೀರ್ಪು ಪ್ರಕಟಿಸಿದರು. ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಸತೀಶ್ ಪ್ರಧಾನ್ ಸೇರಿದಂತೆ 32 ಆರೋಪಿಗಳನ್ನು ನಿರ್ದೋಷಿಗಳು ಎಂದು ತೀರ್ಪು ನೀಡಿದರು.
ಪೂರ್ವ ನಿಯೋಜಿತ ಕೃತ್ಯವಲ್ಲ:
ಬಾಬ್ರಿ ಮಸೀದಿ ಧ್ವಂಸಕ್ಕೆ ಮೊದಲೇ ಸಂಚು ರೂಪಿಸಿರಲಿಲ್ಲ. ಅದೊಂದು ಪೂರ್ವ ನಿಯೋಜಿತ ಕೃತ್ಯವೂ ಆಗಿರಲಿಲ್ಲ. ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಯಾವುದೇ ಪ್ರಬಲ ಸಾಕ್ಷಿಗಳೂ ಇಲ್ಲ ಎಂದು ಕೋರ್ಟ್ ಹೇಳಿದೆ.
LK Advani after courts verdict. pic.twitter.com/DUqX1CqDH7
— Brijesh Pandey (@brijeshpandey27) September 30, 2020
"ಬಾಬ್ರಿ ಮಸೀದಿ ಒಡೆಯುವುದನ್ನು ತಡೆದಿದ್ದ ಅಡ್ವಾಣಿ"
1992ರಲ್ಲಿ ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಮತ್ತು ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರು ಮಸೀದಿ ಒಡೆಯುವುದನ್ನು ತಡೆಯಲು ಪ್ರಯತ್ನಿಸಿದ್ದರು. ಮಸೀದಿ ಒಡೆಯುವವರನ್ನು ತಡೆಯಲು ಬಿಜೆಪಿ ಹಿರಿಯ ನಾಯಕರು ಪ್ರಯತ್ನಿಸಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.