ದೀಪಕ್ ರಾವ್ ಕೊಲೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ
ನವದೆಹಲಿ, ಜನವರಿ 04: ಮಂಗಳೂರಿನ ಕಾಟಿಪಳ್ಳದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರ ಕೊಲೆ ವಿರೋಧಿಸಿ ರಾಜ್ಯದ ಬಿಜೆಪಿ ಸಂಸದರು ದೆಹಲಿಯ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆ ಸೂರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು, ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಬಿಜೆಪಿ ಆರೋಪಿಸಿದ್ದು, ಇಂದು ಬಿಜೆಪಿಯ ಸಂಸದ ಪ್ರಹಲ್ಲಾದ ಜೋಷಿ ಸೇರಿದಂತೆ ಹಲವು ಬಿಜೆಪಿ ಸಂಸದರು ಲೋಕಸಭೆ ಅಧಿವೇಶನಕ್ಕೂ ಮುಂಚೆ ಸಂಸತ್ನ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರ ಕೊಲೆಗಡುಕರ ಬಗ್ಗೆ ಮೃದು ಧೋರಣೆ ತಳೆದಿದೆ, ಮೃತ ದೀಪಕ್ ರಾವ್ ಅವರ ಶವವನ್ನು ಹಿಂದಿನ ಬಾಗಿಲಿನಿಂದ ಹೊತ್ತೊಯ್ದ ಹೇಡಿ ಸರ್ಕಾರ ಇದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ರಾಜ್ಯ ಸರ್ಕಾರವನ್ನು ಬರ್ಖಾಸ್ತು ಮಾಡಬೇಕು ಎಂದು ಒತ್ತಾಯಿಸಿದರು.
ನಂತರ ಮಾತನಾಡಿದ ಸಂಸದ ಪ್ರಹ್ಲಾದ್ ಜೋಷಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಕೊಲೆಗಳು ಸಿದ್ದರಾಮಯ್ಯ ಅವರ ಪ್ರೇರಣೆಯಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿಯೂ ಬಿಜೆಪಿ ಸದಸ್ಯರು ದೀಪಕ್ ರಾವ್ ಕೊಲೆ ವಿರುದ್ಧ ತೀರ್ವ ಅಸಮಾಧಾನ ವ್ಯಕ್ತಪಡಿಸಿದ್ದು, ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರವನ್ನು ಆಗ್ರಹಿಸುತ್ತಿವೆ.












Click it and Unblock the Notifications