ಪ್ರವಾಹ: ಸಚಿವ ಪ್ರಹ್ಲಾದ್ ಜೋಶಿ ಬೇಜವಾಬ್ದಾರಿ ಹೇಳಿಕೆ
ನವದೆಹಲಿ, ಆಗಸ್ಟ್ 09: ರಾಜ್ಯದಲ್ಲಿ ಉಂಟಾಗಿರುವ ಪ್ರಹಾವ ಪರಿಸ್ಥಿತಿಯ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನೀಡಿರುವ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದ ಪ್ರಹಾವ ಪರಿಸ್ಥಿತಿ ಬಗ್ಗೆ ಸುದ್ದಿಗಾರರೊಂದಿಗೆ ನಿನ್ನೆ ಮಾತನಾಡಿದ್ದ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರವು ನಮ್ಮನ್ನು ನೆರವು ಕೇಳಿಲ್ಲ, ನೆರವು ಕೇಳಿದರೆ ನೆರವು ನೀಡಲು ತಯಾರಿದ್ದೇವೆ ಎಂದು ಹೇಳಿದ್ದಾರೆ.
'ಪ್ರವಾಹದಿಂದ ತತ್ತರಿಸುವ ಜಿಲ್ಲೆಗಳಿಗೆ ಯಾವ ರೀತಿಯ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಈವರೆಗೆ ಕೇಳಿಲ್ಲ, ರಾಜ್ಯದಿಂದ ಮನವಿ ಬಂದ ತಕ್ಷಣ ಸ್ಪಂದಿಸಲಾಗುವುದು' ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

'ಉತ್ತರ ಕರ್ನಾಟಕದ ಜನರ ಕಷ್ಟಕ್ಕೆ ಸ್ಪಂದಿಸಲು ಕೇಂದ್ರ ಸಿದ್ಧವಿದೆ ಆದರೆ ಯಾವ ರೀತಿಯ ನೆರವು ಬೇಕು ಎಂದು ರಾಜ್ಯ ಕೇಳಬೇಕು' ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದಿಂದ ಆಯ್ಕೆ ಆಗಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಅರಿವಿಲ್ಲವೇ, ಸರ್ಕಾರ ಕೇಳುವವರೆಗೂ ಅವರು ಕಾಯಬೇಕೆ, ರಾಜ್ಯದ ಸಂಸದರಾಗಿ ಅವರಿಗೆ ಜವಾಬ್ದಾರಿ ಇಲ್ಲವೇ ಎಂಬ ಪ್ರಶ್ನೆಗಳು ಎದ್ದಿವೆ.
ಅಷ್ಟೆ ಅಲ್ಲದೆ, ಯಡಿಯೂರಪ್ಪ ಅವರ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಬಳಿಕ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ಪ್ರಧಾನಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿದ್ದಾರೆ, ಆದರೆ ಅವರು ಪ್ರವಾಹ ಪರಿಸ್ಥಿತಿಗೆ ಯಾವುದೇ ನೆರವು ಏಕೆ ಕೇಳಿಲ್ಲವೆಂಬ ಪ್ರಶ್ನೆಯೂ ಎದ್ದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಜನ ಪ್ರವಾಹದಿಂದ ತತ್ತರಿಸುತ್ತಿರುವುದನ್ನು ರಾಜ್ಯದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ರಾಜ್ಯ ಸರ್ಕಾರ ತಿಳಿಸಿ ನೆರವಿಗೆ ಮೊರೆ ಇಡಬೇಕಂತೆ. ಇದು ನಮ್ಮ ಸನ್ಮಾನ್ಯ ನರೇಂದ್ರ ಮೋದಿ ಅವರು 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಸರ್ಕಾರ ಎಂದು ವ್ಯಂಗ್ಯ ಮಾಡಿದ್ದಾರೆ.












Click it and Unblock the Notifications