ಯುಪಿ ಹೊಸ ಸಚಿವ ಸಂಪುಟಕ್ಕೆ ಬಿಜೆಪಿ ಸಜ್ಜು: ಕೋರ್ ಕಮಿಟಿ ಸಭೆ
ನವದೆಹಲಿ ಮಾರ್ಚ್ 17: ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಚರ್ಚಿಸಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಉತ್ತರ ಪ್ರದೇಶ ಕೋರ್ ಕಮಿಟಿ ಬುಧವಾರ ಆರು ಗಂಟೆಗಳ ಸುದೀರ್ಘ ಮಹತ್ವದ ಸಭೆ ನಡೆಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೆ ಹೊಸ ಸಚಿವ ಸಂಪುಟವನ್ನು ಅಂತಿಮಗೊಳಿಸಲು ಬುಧವಾರ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಯುಪಿ ಹಂಗಾಮಿ ಸಿಎಂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಯುಪಿ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಕೇಶವ್ ಪ್ರಸಾದ್ ಮೌರ್ಯ ಮತ್ತು ಉಪಮುಖ್ಯಮಂತ್ರಿಗಳಾಗಿದ್ದ ದಿನೇಶ್ ಶರ್ಮಾ ರಾಜ್ಯ ಸರ್ಕಾರ ಸಭೆಯಲ್ಲಿ ಭಾಗವಹಿಸಿದ್ದು, ಉತ್ತರ ಪ್ರದೇಶ ವಿಧಾನ ಪರಿಷತ್ತಿಗೆ 36 ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲಾಯಿತು. ಜೊತೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಮುಖರ ಹೆಸರುಗಳ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಹೋಳಿ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
UP Election Result 2022: ಜಯ ಸಾಧಿಸಿದ ಮುಸ್ಲಿಂ ಅಭ್ಯರ್ಥಿಗಳು
ಉತ್ತರ ಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು ಗೆಲ್ಲುವ ಮೂಲಕ 41.29 ಶೇಕಡಾ ಮತಗಳನ್ನು ಪಡೆದು ಅಧಿಕಾರವನ್ನು ಉಳಿಸಿಕೊಂಡಿದೆ. ಆದಿತ್ಯನಾಥ್ ಅವರು ರಾಜ್ಯದಲ್ಲಿ ಪೂರ್ಣಾವಧಿಯನ್ನು ಪೂರ್ಣಗೊಳಿಸಿದ ನಂತರ ಕಳೆದ 37 ವರ್ಷಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಮುಖ್ಯಮಂತ್ರಿಯಾಗಲಿದ್ದಾರೆ.
ಇತ್ತೀಚೆಗಷ್ಟೇ ನಡೆದ ಯುಪಿ ವಿಧಾನಸಭಾ ಚುನಾವಣೆಯಲ್ಲಿ 62,109 ಮತಗಳನ್ನು ಗಳಿಸಿದ ಸಮಾಜವಾದಿ ಪಕ್ಷದ ಅಭ್ಯರ್ಥಿ ಸುಭಾವತಿ ಉಪೇಂದ್ರ ದತ್ ಶುಕ್ಲಾ ಅವರನ್ನು ಸೋಲಿಸಿ, ಸನ್ಯಾಸಿಯಾಗಿ ಬದಲಾಗಿರುವ ರಾಜಕಾರಣಿ ಆದಿತ್ಯನಾಥ್ ಅವರು ಗೋರಖ್ಪುರ ನಗರ ಕ್ಷೇತ್ರದಿಂದ 1,03,390 ಅಂತರದಿಂದ ಗೆದ್ದರು. ಬಿಜೆಪಿ ಗೆಲುವಿನ ಹಿಂದೆ ಮಹಿಳಾ ಮತದಾರರು ಬಹುದೊಡ್ಡ ಪಾಲಿದೆ ಎನ್ನಲಾಗುತ್ತಿದೆ. ಬಿಜೆಪಿ ಸರ್ಕಾರ ಕೈಗೊಂಡ ಯೋಜನೆಗಳಿಗೆ ಮತದಾರರು ಮತ ನೀಡಿದ್ದಾರೆಂದು ಚುನಾವಣೆ ನಂತರದ ಅಧ್ಯಯನಗಳು ತಿಳಿಸಿವೆ.
UP Election Result 2022: ಸೈಕಲ್ ಪಂಚರ್ ಮಾಡಿದ ಬುಲ್ಡೋಜರ್
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಂಸ್ಥೆಗಳು ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ನಡೆಸಿದ್ದವು. ಅದೇ ರೀತಿ ಗ್ರೌಂಡ್ ಜೀರೋ ರಿಸರ್ಚ್ನ ಅಭಿಪ್ರಾಯ ಸಂಗ್ರಹದ ಪ್ರಕಾರ, ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ನುಡಿದಿತ್ತು. ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಕೇಸರಿ ಪಕ್ಷವು 230 ರಿಂದ 235 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟ 160 ರಿಂದ 165 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 3 ರಿಂದ 7 ಹಾಗೂ ಬಿಎಸ್ಪಿ 2 ರಿಂದ 5 ಸ್ಥಾನಗಳನ್ನು ಪಡೆಯುತ್ತವೆ ಎಂದು ಅಂಕಿ-ಅಂಶಗಳು ತಿಳಿಸಿದ್ದವು.
2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.