ಕಪ್ಪು ಶುಕ್ರವಾರದ ಪ್ರತಿಭಟನಾ ಮೆರವಣಿಗೆ: ದೆಹಲಿಯಲ್ಲಿ ಎಸ್ಎಡಿ ಮುಖಂಡರ ಬಂಧನ
ನವದೆಹಲಿ, ಸಪ್ಟೆಂಬರ್ 17: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ "ಕಪ್ಪು ಶುಕ್ರವಾರದ ಪ್ರತಿಭಟನಾ ಮೆರವಣಿಗೆ" ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್, ಮಾಜಿ ಕೇಂದ್ರ ಸಚಿವೆ ಹರ್ ಸಿಮ್ರತ್ ಕೌರ್ ಸೇರಿದಂತೆ 11 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪೂರ್ವಾನುಮತಿ ಪಡೆದುಕೊಳ್ಳದ ಹಿನ್ನೆಲೆಯಲ್ಲಿ ಸಂಸದ್ ಮಾರ್ಗ್ ಠಾಣೆ ಪೊಲೀಸರು ಪ್ರತಿಭಟನಾನಿರತರನ್ನು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
"ಕೇಂದ್ರ ಸರ್ಕಾರ ಮತ್ತು ಹರಿಯಾಣ ಸರ್ಕಾರಗಳು ನಮ್ಮ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದ್ದಾರೆ. ನಮ್ಮನ್ನು ತಡೆಯುವುದಕ್ಕಾಗಿ ಪೊಲೀಸರ ಮೂಲಕ ಲಾಠಿಚಾರ್ಜ್ ನಡೆಸಿದ್ದರೆ, ಕೆಲವೆಡೆ ನಮ್ಮ ವಾಹನಗಳನ್ನು ತಡೆ ಹಿಡಿದಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನೇ ತಡೆದಿದ್ದಾರೆ. ಕೇವಲ ಪಂಜಾಬ್ ರಾಜ್ಯವೊಂದೇ ಅಲ್ಲ ಇಡೀ ದೇಶವು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳಿಗೆ ವಿರುದ್ಧವಾಗಿದೆ ಎನ್ನುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವರಿಕೆ ಮಾಡುವುದಕ್ಕಾಗಿ ನಾವಿಲ್ಲಿ ಸೇರಿದ್ದೇವೆ," ಎಂದು ಎಸ್ಎಡಿ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.
ವಿವಾದಿತ ಕೃಷಿ ಕಾಯ್ದೆ ವಿರುದ್ಧ "ಕಪ್ಪು ಶುಕ್ರವಾರ ಪ್ರತಿಭಟನೆ ಮೆರವಣಿಗೆ"
ದೇಶದ ಬಹುಪಾಲು ರೈತರ ಕೆಂಗಣ್ಣಿಗೆ ಗುರಿಯಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿ ಒಂದು ವರ್ಷ ಪೂರೈಸಲಿರುವ ಹಿನ್ನೆಲೆ ಗುರುದ್ವಾರ ರಕಾಬ್ ಗಂಜ್ ಸಾಹಿಬ್ನಿಂದ ಸಂಸತ್ತಿನವರೆಗೂ "ಕಪ್ಪು ಶುಕ್ರವಾರದ ಪ್ರತಿಭಟನಾ ಮೆರವಣಿಗೆ" ನಡೆಸಲಾಗುತ್ತಿತ್ತು.
ವಿವಾದಿತ ಕೃಷಿ ಕಾಯ್ದೆ ರದ್ದುಗೊಳಿಸುವವರೆಗೂ ಪ್ರತಿಭಟನೆ
ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಇಂದಿಗೂ ಸಾವಿರಾರು ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನೂರಾರು ರೈತರು ಪ್ರಾಣ ಕಳೆದುಕೊಂಡಿದ್ದರೂ, ಕೇಂದ್ರ ಸರ್ಕಾರವು ಅದರ ಬಗ್ಗೆ ತೀವ್ರ ಅಸಡ್ಡೆ ತೋರಿಸುತ್ತಿದ್ದಾರೆ. ಮೂರು ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಕೇಂದ್ರದ ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ ಹಿನ್ನೆಲೆ ಮಾರ್ಗ ಬದಲು
ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಹಲವೆಡೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಜರೋಡಾ ಕಲಾನ್ ಗಡಿಯಲ್ಲಿ ರಸ್ತೆಗಳನ್ನು ಮುಚ್ಚುವ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಟ್ರಾಫಿಕ್ ಪೊಲೀಸರು ಬೇರೆ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಐಟಿಓ, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.
24 ವರ್ಷಗಳ ಮೈತ್ರಿ ಕಡಿದುಕೊಳ್ಳಲು ಕಾರಣವಾದ ಕೃಷಿ ಕಾಯ್ದೆ
ಕಳೆದ 2021ರ ಸೆಪ್ಟೆಂಬರ್ 17ರಂದು ವಿವಾದಿತ ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿದ ಸಂದರ್ಭದಲ್ಲಿ ಶಿರೋಮಣಿ ಅಕಾಲಿ ದಳದ ಸುಖ್ಬೀರ್ ಸಿಂಗ್ ಬಾದಲ್ ಮತ್ತು ಹರ್ ಸಿಮ್ರತ್ ಕೌರ್ ಬಾದಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದ ಹರ್ ಸಿಮ್ರತ್ ಕೌರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಕೃಷಿ ಕಾಯ್ದೆ ವಿರೋಧಿಸಿದ ಶಿರೋಮಣಿ ಅಕಾಲಿ ದಳವು ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದೊಂದಿಗಿನ 24 ವರ್ಷಗಳ ಮೈತ್ರಿಯನ್ನು ಕಡಿದುಕೊಂಡಿತು.
ಕೃಷಿ ಕಾಯ್ದೆಗಳ ವಿರುದ್ಧ ಮುಂದುವರಿದ ಪ್ರತಿಭಟನೆ
ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.