"ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್ ಡಿಎಗೆ ನೀಡಿದ ಬೆಂಬಲ ವಾಪಸ್"
ನವದೆಹಲಿ, ಡಿಸೆಂಬರ್.01: ರಾಷ್ಟ್ರ ರಾಜಧಾನಿಯಲ್ಲಿ ರೈತರ ಉಗ್ರ ಪ್ರತಿಭಟನೆಗೆ ಕಾರಣವಾಗಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಹಿಂದಕ್ಕೆ ತೆಗೆದುಕೊಳ್ಳಬೇಕು. ಇಲ್ಲದೇ ಹೋದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ನೀಡಿರುವ ಬೆಂಬಲವನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರೀಯ ಲೋಕತಂತ್ರಿಕ ಪಕ್ಷವು ಎಚ್ಚರಿಸಿದೆ.
"ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗೆ ನನ್ನ ವಿರೋಧವಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಸರ್ಕಾರವು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ. ಒಂದು ವೇಳೆ ಸರ್ಕಾರವನ್ನು ಇದಕ್ಕೆ ಒಪ್ಪದೇ ಹೋದಲ್ಲಿ ಎನ್ ಡಿಎ ಮೈತ್ರಿಕೂಟದಲ್ಲಿ ಮುಂದುವರಿಯಬೇಕೇ ಬೇಡವೇ ಎನ್ನುವುದರ ಕುರಿತು ಆಲೋಚಿಸಬೇಕಾಗುತ್ತದೆ" ಎಂದು ಆರ್ ಎಲ್ ಪಿ ಮುಖಂಡ ಹನುಮಾನ್ ಬೇನಿವಾಲಾ ಹೇಳಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಭವಿಷ್ಯದಲ್ಲಿನ ತೆರಬೇಕಾದ ದಂಡದ ಬಗ್ಗೆ ರೈತರ ಎಚ್ಚರಿಕೆ
ಕೇಂದ್ರ ಸರ್ಕಾರವು ರೈತರ ಸಮಸ್ಯೆಗಳನ್ನು ಆಲಿಸಬೇಕು. ತೀವ್ರ ವಿರೋಧಕ್ಕೆ ಕಾರಣವಾಗಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ನಗೌರ್ ಸಂಸದರೂ ಆಗಿರುವ ಹನುಮಾನ್ ಬೇನಿವಾಲಾ ಆಗ್ರಹಿಸಿದ್ದಾರೆ. ಕೇಂದ್ರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮೈತ್ರಿಕೂಟದಲ್ಲಿ ರಾಷ್ಟ್ರೀಯ ಲೋಕತಂತ್ರಿಕ ಪಕ್ಷವೂ ಸೇರಿದೆ. ಕಳೆದ ಬಾರಿ ರಾಜಸ್ಥಾನದಲ್ಲಿ ಬಿಜೆಪಿ ಜೊತೆಗೂಡಿ ಆರ್ಎಲ್ ಪಿ ಚುನಾವಣೆಯಲ್ಲಿ ಸ್ಪರ್ಧಿಸಿತ್ತು.
ಸ್ವಾಮಿನಾಥನ್ ಶಿಫಾರಸ್ಸು ಜಾರಿಗೆ ಒತ್ತಾಯ:
ಕೇಂದ್ರ ಸರ್ಕಾರವು ಸದ್ಯ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ದೆಹಲಿಗೆ ಪ್ರತಿಭಟನೆ ನಡೆಸುವುದಕ್ಕಾಗಿ ಆಗಮಿಸಿರುವ ಎಲ್ಲ ರೈತರ ಸಮಸ್ಯೆಗಳನ್ನು ಸರಿಯಾಗಿ ಆಲಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹನುಮಾನ್ ಬೇನಿವಾಲಾ ಆಗ್ರಹಿಸಿದ್ದಾರೆ. ಅಲ್ಲದೇ, ಕೇಂದ್ರ ಸರ್ಕಾರವು ರೈತರಿಗೆ ತೊಂದರೆ ಆಗುವಂತಹ ಯಾವುದೇ ಕಾಯ್ದೆ ಮತ್ತು ಕಾನೂನುಗಳನ್ನು ಜಾರಿಗೊಳಿಸಬಾರದು. ಬದಲಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ಆಹ್ವಾನ ತಿರಸ್ಕರಿಸಿರುವ ರೈತರು:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ಕುರಿತು ನಿರ್ಣಾಯಕ ನಿಲುವು ಸ್ಪಷ್ಟಪಡಿಸಿಕೊಳ್ಳಬೇಕಿದೆ. ನಮ್ಮ ಬೇಡಿಕೆಗಳು ಈಡೇರಿಸಿಕೊಳ್ಳುವುದಕ್ಕಾಗಿ ನಾವು ದೆಹಲಿಗೆ ಬಂದಿದ್ದೇವೆ. ಅದು ಪೂರ್ಣಗೊಳ್ಳುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಮಾತಿಲ್ಲ" ಎಂದು ರೈತ ಮುಖಂಡರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸಿಂಘು ಗಡಿ ಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಪ್ರತಿನಿಧಿಯೊಬ್ಬರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕೀ ಬಾತ್ ಅನ್ನು ಆಲಿಸಬೇಕು ಎಂದು ಆಗ್ರಹಿಸಿದರು.