ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ: ಅನಂತ್-ಬಿಎಸ್ವೈ
ನವದೆಹಲಿ, ಮೇ.18: ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ರಾಜ್ಯದ ಪ್ರಭಾವಿ ಬಿಜೆಪಿ ನಾಯಕರು ದೆಹಲಿಯಲ್ಲಿ ಬಿರುಸಿನ ಮಾತುಕತೆ ನಡೆಸಿದ್ದಾರೆ. ಆರೆಸ್ಸೆಸ್ ನಾಯಕರ ಜತೆ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ ನಾಯಕರು ಈಗ ಬಿಎಸ್ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಭಾನುವಾರ ಬೆಳಗ್ಗೆ ದೆಹಲಿಯ ಗುಜರಾತ್ ಭವನದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಶಿವಮೊಗ್ಗದ ಸಂಸದ ಬಿಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್, ಅಮಿತ್ ಶಾ ಅವರು ಭಾಗವಹಿಸಿದ್ದರು.

ಅನಂತ್ ಕುಮಾರ್ ನಿವಾಸದಲ್ಲಿ ಸಭೆ: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿಗಳಾದ ಆರ್ ಅಶೋಕ್, ಕೆಎಸ್ ಈಶ್ವರಪ್ಪ, ಅಯನೂರು ಮಂಜುನಾಥ್, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಸಂಸದ ಜಿಎಂ ಸಿದ್ದೇಶ್ವರ, ಬಿಜೆ ಪುಟ್ಟಸ್ವಾಮಿ ಸೇರಿದಂತೆ ರಾಜ್ಯದ ಹಲವಾರು ಪ್ರಮುಖ ನಾಯಕರು ಅನಂತಕುಮಾರ್ ಅವರ ದೆಹಲಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ ಅನಂತಕುಮಾರ್ ಹಾಗೂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭೇಟಿಯಾಗಲು ನಿರ್ಧರಿಸಲಾಗಿದೆ. ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಗರಿಷ್ಠ ಪ್ರಮಾಣದ ಪ್ರಾತಿನಿಧ್ಯ ನೀಡುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲು ರಾಜ್ಯ ತಂಡ ಸಿದ್ಧತೆ ನಡೆಸಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಹಾಗೂ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುತ್ತದೆ. ಇನ್ನೂ ಮುರ್ನಾಲ್ಕು ದಿನ ರಾಜ್ಯದ ನಾಯಕರು ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಯಾರಿಗೆ ಸಿಗಲಿದೆ ಯೋಗ?: ಬೆಂಗಳೂರು ದಕ್ಷಿಣ ಸಂಸದ ಅನಂತಕುಮಾರ್, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ, ಶಿವಮೊಗ್ಗದ ಸಂಸದ ಬಿಎಸ್ ಯಡಿಯೂರಪ್ಪ ಅವರಿಗೆ ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಕಂಡು ಬಂದಿದೆ. ಕರ್ನಾಟಕದ ಕೋಟಾದಲ್ಲಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಕೂಡಾ ಸಚಿವ ಸ್ಥಾನ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಬಿಜಾಪುರದ ರಮೇಶ ಚಂದ್ರಪ್ಪ ಜಿಗಜಿಣಿಗಿ, ಬೆಳಗಾವಿಯ ಸಂಸದ ಸುರೇಶ್ ಅಂಗಡಿ ಹೆಸರುಗಳು ಕೂಡಾ ಕೇಳಿ ಬಂದಿವೆ.












Click it and Unblock the Notifications