ಫೆ.17ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ
ನವದೆಹಲಿ, ಫೆ.7 : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್, ಒಂಬತ್ತು ಮಂದಿ ಹಾಲಿ ಸಂಸದರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಉಳಿದ 19 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಫೆ.17ರಂದು ಮತ್ತೊಮ್ಮೆ ಸಭೆ ಸೇರಿ ನಿರ್ಧಾರ ಕೈಗೊಳ್ಳಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ವಯಾಲಾರ್ ರವಿ ನೇತೃತ್ವದಲ್ಲಿ ಕರ್ನಾಟಕ ಚುನಾವಣಾ ಪರಿಶೀಲನಾ ಸಮಿತಿ (ಸ್ಕ್ರೀನಿಂಗ್ ಕಮಿಟಿ) ಸಭೆ ನಡೆಯಿತು. ಸಭೆಯಲ್ಲಿ ಒಂಬತ್ತು ಹಾಲಿ ಸಂಸದರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದ್ದು, ಉಳಿದ 19 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಲಾಗಿದೆ.

ಇವುಗಳಲ್ಲಿ ಬೆಂಗಳೂರು ಉತ್ತರ ಮತ್ತು ಮಂಗಳೂರು ಕ್ಷೇತ್ರಗಳಿಗೆ ಆಂತರಿಕ ಚುನಾವಣೆ ನಡೆಯಲಿದ್ದು, ಉಳಿದ 17 ಕ್ಷೇತ್ರಗಳಿಗೆ ಫೆ.17ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. [ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು]
ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಿರುವ ಸಂಭವನೀಯರ ಪಟ್ಟಿಯಲ್ಲಿ ಎರಡು ಕ್ಷೇತ್ರದಿಂದ ಎರಡು ಹೆಸರುಗಳನ್ನು ಸಲ್ಲಿಸಲಾಗಿದೆ. ಸಮಿತಿಗೆ ಸಲ್ಲಿಸಿರುವ ಪಟ್ಟಿಯಲ್ಲಿ ಕೆಲವು ಕ್ಷೇತ್ರಗಳಿಗೆ ಒಬ್ಬರ ಹೆಸರು, ಮತ್ತೆ ಕೆಲ ಕ್ಷೇತ್ರಗಳಿಗೆ ಎರಡು ಮೂರು ಹೆಸರುಗಳನ್ನು ಸೂಚಿಸಲಾಗಿದ್ದು, ಸಭೆಯಲ್ಲಿ ಅಂತಿಮ ಅಭ್ಯರ್ಥಿ ಯಾರು? ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. [ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಕರ್ನಾಟಕದ ಮೇಲೆ ಹೆಚ್ಚಿನ ನಿರೀಕ್ಷೆ ಹೊಂದಿರುವ ಎಐಸಿಸಿ ಚುನವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ರಾಜ್ಯದಿಂದ ನಿರೀಕ್ಷಿಸುತ್ತಿದೆ. ಆದ್ದರಿಂದ ಎಚ್ಚರಿಕೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ. ಹಾಲಿ ಸಚಿವರು ಹಾಗೂ ಶಾಸಕರನ್ನು ಕಣಕ್ಕೆ ಇಳಿಸುವುದು ಬೇಡ ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಚಿತ್ರದುರ್ಗ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಉತ್ತರ ಕನ್ನಡ ಕ್ಷೇತ್ರದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ. ಆದರೆ, ಈ ಇಬ್ಬರು ನಾಯಕರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಐದು ಕ್ಷೇತ್ರಗಳಲ್ಲಿ ಯುವಕರಿಗೆ ಹಾಗೂ ನಾಲ್ಕು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ, ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಕರ್ನಾಟಕದಿಂದ ಕನಿಷ್ಠ 18ರಿಂದ 20 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅವರಿಗೆ ಸೂಚನೆ ನೀಡಲಾಗಿದೆ.












Click it and Unblock the Notifications