ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ರಾಜೀನಾಮೆ
ನವದೆಹಲಿ, ಜನವರಿ 11: ಭ್ರಷ್ಟಾಚಾರ ಆರೋಪದ ಎದುರಿಸುತ್ತಿದ್ದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಇದ್ದ ಆಯ್ಕೆ ಸಮಿತಿ ಗುರುವಾರವಷ್ಟೇ ಸಿಬಿಐ ನಿರ್ದೇಶಕ ಹುದ್ದೆಯಿಂದ ಅಲೋಕ್ ವರ್ಮಾ ಅವರನ್ನು ವರ್ಗಾವಣೆ ಮಾಡಿತ್ತು.
ಅಗ್ನಿ ಶಾಮಕದಳದ ಪ್ರಧಾನಿ ನಿರ್ದೇಶಕ(ಡೈರಕ್ಟರ್ ಜನರಲ್) ಹುದ್ದೆಗೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.

ಕೇಂದ್ರ ತನಿಖಾ ದಳದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಲೋಕ್ ವರ್ಮಾ ಅವರನ್ನು ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿತ್ತು. ಕೇಂದ್ರ ಸರ್ಕಾರದ ಈ ನಿರ್ಣಯವನ್ನು ಪ್ರಶ್ನಿಸಿ ಅಲೋಕ್ ವರ್ಮಾ ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.
ಜ.8 ರಂದು ಈ ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಸಿಬಿಐ ನಿರ್ದೇಶಕರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರದ ನಿರ್ಣಯವನ್ನು ತಪ್ಪು ಎಂದಿತ್ತು. ಮತ್ತು ಅಲೋಕ್ ವರ್ಮಾ ಅವರನ್ನೇ ಸಿಬಿಐ ನಿರ್ದೇಶಕರನ್ನಾಗಿ ಮುಂದುವರಿಯುವಂತೆ ಆದೇಶಿಸಿತ್ತು. ಅವರು ಮತ್ತೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಆಯ್ಕೆ ಸಮಿತಿ ಅವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿತ್ತು.
ಇದರಿಂದ ಬೇಸರಗೊಂಡ ಅಲೋಕ್ ವರ್ಮಾ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ.












Click it and Unblock the Notifications