ಕೃಷಿ ಕಾಯ್ದೆ ವಾಪಸ್: ಜಿಲೇಬಿ ಹಂಚಿ ರೈತರ ಸಂಭ್ರಮ
ನವದೆಹಲಿ, ನವೆಂಬರ್ 19: ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರದ ವಿರುದ್ಧ ಸುದೀರ್ಘ ಹೋರಾಟ ನಡೆಸಿದ ರೈತರ ಕನಸು ನನಸಾಗಿದ್ದು, ರೈತರ ಹರ್ಷೋದ್ಘಾರ ಮುಗಿಲು ಮಟ್ಟಿದೆ.
ದೆಹಲಿಯ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಪ್ರಧಾನಿ ಮೋದಿ ಘೋಷಣೆ ಹೊರ ಬೀಳುತ್ತಿದ್ದಂತೆ 'ಜಿಲೇಬಿ' ಹಂಚುವ ಮೂಲಕ ಸಂಭ್ರಮಿಸಿದರು. ರೈತರ ಹೋರಾಟದ ಪರ "ಕಿಸಾನ್ ಜಿಂದಾಬಾದ್" ಜಯಘೋಷ ವಾಕ್ಯವನ್ನು ಮೊಳಗಿಸಿದರು. ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ಇದರ ಮಧ್ಯೆ "ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಸದಸ್ಯಕ್ಕೆ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಎಂಎಸ್ಪಿ ಹೊರತುಪಡಿಸಿ ರೈತರ ಇತರ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳು ಯಾವುವು?
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.












Click it and Unblock the Notifications