ರಾಜ್ಯಸಭೆಯಲ್ಲಿಂದು ತ್ರಿವಳಿ ತಲಾಖ್ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ, ಫೆಬ್ರವರಿ 13: ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು (ಬುಧವಾರ) ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮತ್ತು ನಾಗರಿಕತ್ವ ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ರಾಜ್ಯಸಭೆಯಲ್ಲಿ ಮುಸ್ಲಿಂ ಮಹಿಳೆಯರ ರಕ್ಷಣಾ ಕಾಯ್ದೆಯನ್ನು ಮಂಡಿಸಲಿದ್ದಾರೆ.
ಕಳೆದ ಡಿಸೆಂಬರ್ 27 ರಂದು ಲೋಕಸಭೆಯಲ್ಲಿ 245 ಮತಗಳಿಂದ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಲಾಗಿತ್ತು.

ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಪತಿಯು, ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಎನ್ನುವ ಮೂಲಕ ಯಾವುದೇ ಲಿಖಿತ ದಾಖಲೆಗಳಿಲ್ಲದೆ ವಿಚ್ಛೇದನ ನೀಡುವುದಕ್ಕೆ ತ್ರಿವಳಿ ತಲಾಖ್ ನಲ್ಲಿ ಅವಕಾಶವಿತ್ತು.
ದರೆ ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಸಿಯಲಾಗುತ್ತಿದೆ, ಮತ್ತು ಅವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಮನಗಂಡ ಸರ್ಕಾರ, ತ್ರಿವಳಿ ತಲಾಖ್ ಅನ್ನು ಅಪರಾಧವನ್ನಾಗಿ ಪರಿಗಣಿಸುವಂತೆ ಮುಸ್ಲಿಂ ಮಹಿಳೆಯರ ಕಾಯ್ದೆಯಲ್ಲಿ ತಿದ್ದುಪಡಿ ತರಲು ನಿರ್ಧರಿಸಿತ್ತು. ಮುಸ್ಲಿಂ ಮಹಿಳೆಯರಿಗೆ ತಕ್ಷಣವೇ ವಿಚ್ಛೇದನ ನೀಡುವಂತಹ ಪದ್ಧತಿಗೆ ಕಡಿವಾಣ ಹಾಕಲು ಮುಸ್ಲಿಂ ಮಹಿಳೆಯರ ಮಸೂದೆ 2018 (ವಿವಾಹದ ಹಕ್ಕುಗಳ ರಕ್ಷಣೆ) ಮುಂದಾಗಿದೆ. ತ್ರಿವಳಿ ತಲಾಖ್ ಮಸೂದೆಯಲ್ಲಿ ಕೆಲವು ಗೊಂದಲವಿದ್ದಿದ್ದರಿಂದ ಕಳೆದ ಸೆಪ್ಟೆಂಬರ್ ನಲ್ಲಿ ಈ ಮಸೂದೆಯಲ್ಲಿ ಕೇಂದ್ರ ಸರ್ಕಾರ ಕೆಲವು ತಿದ್ದುಪಡಿ ತಂದಿತ್ತು. ಆ ತಿದ್ದುಪಡಿಯ ಪ್ರಕಾರ ಅಕಸ್ಮಾತ್ ಮುಸ್ಲಿಂ ಪತಿ ತ್ರಿವಳಿ ತಲಾಖ್ ನೀಡಿದರೆ ಆತನ ವಿರುದ್ಧ ಪತ್ನಿ ಅಥವಾ ಯಾವುದೇ ಹತ್ತಿರದ ಬಂಧುಗಳು ದೂರು ನೀಡಬಹುದು.
ಮೌಖಿಕವಾಗಿ ತಲಾಖ್ ಹೇಳುವುದು ಅಥವಾ ವಾಟ್ಸಾಪ್, ಟೆಲಿಫೋನ್, ಪತ್ರ ಯಾವುದೇ ತಂತ್ರಜ್ಞಾನವನ್ನು ಬಳಸಿಕೊಂಡು ತಲಾಖ್ ಸಂದೇಶ ಕಳಿಸಿ ವಿಚ್ಛೇದನ ಪಡೆಯುವುದನ್ನೂ ಈ ಕಾಯ್ದೆ ಅಪರಾಧವೆಂದಿದೆ.
ನಾಗರಿಕತ್ವ ಮಸೂದೆ:
ಇದರೊಟ್ಟಿಗೆ ಅಫಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ವಲಸೆಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ಮಸೂದೆಯಾದ ನಾಗರಿಕತ್ವ ಮಸೂದೆಯಲ್ಲಿ ತಿದ್ದುಪಡಿ ತರುವ ವಿಷಯವೂ ರಾಜ್ಯ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಮಸೂದೆಯಲ್ಲಿ ತಿದ್ದುಪಡಿ ತರುವ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ ಮಿಜೋರಾಂ ನಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ.












Click it and Unblock the Notifications