ವಲಸೆ ಕಾರ್ಮಿಕರ ಕಾಲ್ನಡಿಗೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ದೆಹಲಿ, ಮೇ 11: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ಹೋಗಲಾಗದೆ, ದೇಶದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವು ರಾಜ್ಯಗಳಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಕಾರಣ ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ ಸಾಗುತ್ತಿದ್ದಾರೆ.
ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಊಟ, ವಸತಿ ನೀಡಿ ಅವರನ್ನು ಮನೆಗೆ ಕಳುಹಿಸಬೇಕು ಎಂದು ರಾಜ್ಯದ ವಿರೋಧ ಪಕ್ಷಗಳು ಒತ್ತಾಯಿಸಿದ್ದವು.
ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ; ಶ್ರಮಿಕ್ ರೈಲಿನ ಮಾರ್ಗಸೂಚಿ ಬದಲಾವಣೆ
ಈ ಕುರಿತು ಕೇಂದ್ರ ಗೃಹ ಸಚಿವಾಲಯ ರಾಜ್ಯದ ಕಾರ್ಯದರ್ಶಿಗಳಿಗೆ ಕಟ್ಟುನಿಟ್ಟಾದ ಸೂಚನೆ ಹೊರಡಿಸಿದೆ. ವಲಸೆ ಕಾರ್ಮಿಕರ ಬಗ್ಗೆ ಗಮನ ಕೊಡಿ, ಅವರನ್ನು ನಡೆದು ಹೋಗುವುದು ತಪ್ಪಿಸಿ ಎಂದು ಸೂಚಿಸಿದೆ.
ವಲಸೆ ಕಾರ್ಮಿಕರಿಗಾಗಿ ದೇಶಾದ್ಯಂತ 'ಶ್ರಮಿಕ್' ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಹಾಗಿದ್ದರೂ ಇನ್ನು ಅನೇಕರು ಹೆದ್ದಾರಿಯಲ್ಲಿ ನಡೆದುಕೊಂಡೇ ಊರುಗಳಿಗೆ ತೆರಳುತ್ತಿದ್ದಾರೆ. ವಲಸೆ ಕಾರ್ಮಿಕರಿಗೆ ಊಟ, ವಸತಿ ನೀಡಿ ರೈಲು ಹತ್ತಿಸಬೇಕು. ಶ್ರಮಿಕ್ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಜ್ಯಗಳಿಗೆ ಸೂಚಿಸಿದೆ.
ರಾಜ್ಯಗಳಿಂದ ರಾಜ್ಯಕ್ಕೆ ರೈಲು ವ್ಯವಸ್ಥೆ ಮಾಡುವುದರ ಜೊತೆಗೆ ಅವರ ಗ್ರಾಮಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಕೂಡ ಮಾಡಬೇಕು ಎಂದು ಹೇಳಿದೆ.