ಎಂಎಸ್ಪಿ ಕುರಿತು ಚರ್ಚಿಸಲು ಸಮಿತಿಗೆ 5 ರೈತ ಮುಖಂಡರ ಹೆಸರು ಕೇಳಿದ ಕೇಂದ್ರ ಸರ್ಕಾರ
ನವದೆಹಲಿ, ಡಿಸೆಂಬರ್ 1: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮತ್ತು ಇತರ ವಿಷಯಗಳ ಕುರಿತು ಚರ್ಚೆಗಾಗಿ ಸಮಿತಿಯನ್ನು ರಚಿಸಲು ಕೇಂದ್ರ ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ದಿಂದ ಐದು ಹೆಸರುಗಳ ಪಟ್ಟಿಯನ್ನು ಕೇಳಿದೆ.
ಈ ಕುರಿತು ಮಂಗಳವಾರ ಮಾತನಾಡಿರುವ ರೈತ ಮುಖಂಡ ದರ್ಶನ್ ಪಾಲ್, ಡಿಸೆಂಬರ್ 4ರ ಸಭೆಯಲ್ಲಿ ರೈತ ಸಂಘಗಳ ಛತ್ರಿ ಮಂಡಳಿಯು ಹೆಸರುಗಳನ್ನು ನಿರ್ಧರಿಸುತ್ತದೆ ಎಂದು ಹೇಳಿದರು.
ರೈತರು ಕಳೆದ ಒಂದು ವರ್ಷದಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸಂಸತ್ತಿನ ಎರಡೂ ಸದನಗಳು(ಲೋಕಸಭೆ ಮತ್ತು ರಾಜ್ಯಸಭೆ) ಅಂಗೀಕರಿಸಿದ ಒಂದು ದಿನದ ನಂತರ ಸರ್ಕಾರದಿಂದ ಈ ನಿರ್ಧಾರ ಬಂದಿದೆ.

"ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವಿಷಯದ ಬಗ್ಗೆ ಚರ್ಚಿಸುವ ಸಮಿತಿಗೆ ಎಸ್ಕೆಎಂನಿಂದ ಐದು ಹೆಸರುಗಳನ್ನು ಕೇಂದ್ರ ಸರ್ಕಾರ ಕೇಳಿದೆ. ನಾವು ಇನ್ನೂ ಹೆಸರುಗಳನ್ನು ನಿರ್ಧರಿಸಿಲ್ಲ. ಡಿಸೆಂಬರ್ 4ರ ನಮ್ಮ ಸಭೆಯಲ್ಲಿ ನಾವು ಇದನ್ನು ನಿರ್ಧರಿಸುತ್ತೇವೆ ಎಂದು ದರ್ಶನ್ ಪಾಲ್ ಪಿಟಿಐಗೆ ತಿಳಿಸಿದರು.
40ಕ್ಕೂ ಹೆಚ್ಚು ರೈತ ಸಂಘಗಳ ಛತ್ರಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಮೂರು ಕೃಷಿ ಕಾನೂನುಗಳ ರದ್ದತಿ ಮತ್ತು ಎಂಎಸ್ಪಿಗೆ ಕಾನೂನು ಖಾತರಿ ಸೇರಿದಂತೆ ಅವರ ಇತರ ಬೇಡಿಕೆಗಳಿಗಾಗಿ ರೈತರ ಚಳವಳಿಯನ್ನು ಮುನ್ನಡೆಸುತ್ತಿದೆ.
ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸುವುದು, ಬದಲಾಗುತ್ತಿರುವ ದೇಶದ ಅಗತ್ಯಗಳಿಗೆ ಅನುಗುಣವಾಗಿ ಬೆಳೆ ಮಾದರಿಗಳನ್ನು ಬದಲಾಯಿಸುವುದು ಮತ್ತು ಎಂಎಸ್ಪಿಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕವಾಗಿಸುವ ವಿಷಯಗಳ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನು ರಚಿಸಲಾಗುವುದು ಎಂದು ನವೆಂಬರ್ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

ಕಳೆದ ವಾರ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದಲ್ಲಿ ರೈತರ ಪ್ರತಿಭಟನೆಯ ಕೇಂದ್ರವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಘೋಷಣೆ ಮಾಡಿದರು.
ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ
ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ- ಗಲಾಟೆ ನಡುವೆ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ ಅಂಗೀಕರಿಸಲಾಯಿತು.
ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಹೊಸ ಮಸೂದೆಯ ಮೇಲೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಕುಳಿತಿದ್ದವು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾಯ್ದೆಗಳ ರದ್ಧತಿ ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಧ್ವನಿಮತದ ಮೂಲಕ ಕೇಂದ್ರ ಸರ್ಕಾರವು ಮಸೂದೆಯನ್ನು ಅಂಗೀಕರಿಸಿದೆ.
ಪ್ರತಿಪಕ್ಷ ನಾಯಕರ ತೀವ್ರ ವಿರೋಧದ ನಡುವೆಯೂ ಯಾವುದೇ ಚರ್ಚೆ ಇಲ್ಲದೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ಧತಿ ಮಸೂದೆ ಅಂಗೀಕರಿಸಲಾಯಿತು. ತದನಂತರ ರಾಜ್ಯಸಭೆಯಲ್ಲೂ ನೂತನ ಮಸೂದೆ ಅಂಗೀಕರಿಸಲಾಗಿದ್ದು, ಮೇಲ್ಮನೆಯಲ್ಲೂ ಮಸೂದೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ
ಲೋಕಸಭೆಯಲ್ಲಿ ಕೃಷಿ ಕಾಯ್ದೆಗಳ ರದ್ಧತಿ ಮಸೂದೆ, 2021 ಅನ್ನು ಅಂಗೀಕರಿಸಲಾಗಿದೆ. ಆದರೆ ನಮ್ಮ ಬೇಡಿಕೆಗಳು ಇನ್ನೂ ಪೂರ್ಣವಾಗಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಉತ್ತರ ಪ್ರದೇಶದ ಕೌಶಂಬಿಯಲ್ಲಿ ಮಾತನಾಡಿದ ರೈತ ಮುಖಂಡ ರಾಕೇಶ್ ಟಿಕಾಯತ್, ಇದು ರೈತರ ಪ್ರತಿಭಟನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲಾ 750 ರೈತರಿಗೆ ಗೌರವವಾಗಿದೆ. ಇದರ ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ಇತರೆ ಸಮಸ್ಯೆಗಳು ಇನ್ನೂ ಬಾಕಿ ಉಳಿದಿವೆ. ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದರು.












Click it and Unblock the Notifications