ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ತೀವ್ರ: ಸಭೆ ಕರೆದ ಅಮಿತ್ ಶಾ
ನವದೆಹಲಿ, ಡಿಸೆಂಬರ್ 19: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳು ತೀವ್ರವಾಗುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಭದ್ರತೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಭದ್ರತೆಯ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಖಾತೆ ರಾಜ್ಯ ಸಚಿವ ಕಿಶನ್ ಕುಮಾರ್ ರೆಡ್ಡಿ, ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರುಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನರೇಂದ್ರ ಮೋದಿ ಸರ್ಕಾರದಿಂದ ಜನವಿರೋಧಿ ಕಾಯಿದೆ ಜಾರಿಗೆ
ಈ ಉನ್ನತ ಮಟ್ಟದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ಸದ್ಯದ ದೇಶ ಭದ್ರತೆಯ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಪ್ರತಿಭಟನೆಯನ್ನು ಹತ್ತಿಕ್ಕಲು ಹಾಗೂ ಶಾಂತಿ ಕಾಪಾಡುವ ಬಗ್ಗೆ ಮುಂದಿನ ಕಾರ್ಯಗಳ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ.
ಉತ್ತರ ಭಾರತದ ಅದರಲ್ಲೂ ದೇಶದ ರಾಜಧಾನಿ ದೆಹಲಿ, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಾದ ಆಸ್ಸಾಂ, ನಾಗಾಲ್ಯಾಂಡ್ ಸೇರಿದಂತೆ ಇತರ ಪ್ರದೇಶಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಪ್ರತಿಭಟನೆಗಳು ದಕ್ಷಿಣ ಭಾರತಕ್ಕೂ ಹರಡಿದೆ. ಕರ್ನಾಟಕ, ಕೇರಳದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳತೊಡಗಿವೆ. ಹೀಗಾಗಿ ಈ ಭದ್ರತಾ ಸಭೆ ಮಹತ್ವ ಪಡೆದಿದೆ.
ಪೌರತ್ವ ಕಾಯ್ದೆ; ಮಂಗಳೂರಿನಲ್ಲಿ ಭುಗಿಲೆದ್ದ ಪ್ರತಿಭಟನೆ, ಕರ್ಫ್ಯೂ ಜಾರಿ
ಬೆಂಗಳೂರಿನಲ್ಲಿ ಹೋರಾಟ ನಡೆಯುವ ಸಂದರ್ಭದಲ್ಲಿ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರ ಬಂಧನವೂ ಆಗಿದೆ. ಇದು ರಾಷ್ಟ್ರದ ಗಮನ ಸೆಳೆದಿದೆ. ಪ್ರತಿಭಟನೆಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಮುನ್ಸೂಚನೆ ಅರಿತಿರುವ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ ನಡೆಸಲು ಉದ್ದೇಶಿಸಿದ್ದಾರೆ.