ಪೌರತ್ವ ತಿದ್ದುಪಡಿ ಕಾಯ್ದೆ ಹೊತ್ತಿಸಿದ 'ಪಂಜಿ'ಗೆ ದೆಹಲಿ ಧಗಧಗ
ದೆಹಲಿ, ಡಿಸೆಂಬರ್.19: ಈಶಾನ್ಯ ರಾಜ್ಯಗಳಿಗಿಂತ ಪೌರತ್ವ ತಿದ್ದುಪಡಿ ಕಾಯ್ದೆಯ ಜ್ವಾಲೆಗೆ ರಾಷ್ಟ್ರ ರಾಜಧಾನಿಯೇ ಹೊತ್ತಿ ಉರಿಯುತ್ತಿದೆ. ಕಳೆದೊಂದು ವಾರದಿಂದ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ಕಿಚ್ಚಿಗೆ ದೆಹಲಿಗೆ ದೆಹಲಿಯೇ ಹೊತ್ತಿ ಉರಿಯುತ್ತಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಿಷೇಧಾಜ್ಞೆ ನಡುವೆಯೂ ಸಾವಿರಾರು ಪ್ರತಿಭಟನಾಕಾರರು ದೆಹಲಿಯ ಕೆಂಪುಕೋಟೆ ಬಳಿ ನೆರೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಿಎಎ ವಿರುದ್ಧ ಪ್ರತಿಭಟನೆ ಮಧ್ಯೆಯೇ ಪಾಕ್ ಮಹಿಳೆಗೆ ಭಾರತದ ಪೌರತ್ವ
ಈಗಾಗಲೇ ದೆಹಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವಿನ ಘರ್ಷಣೆ ರಾಷ್ಟ್ರಾದ್ಯಂತ ಸುದ್ದಿ ಆಗಿದೆ. ಇದರ ಬೆನ್ನಲ್ಲೇ ಇಂದು ಪ್ರತಿಭಟನೆ ಮತ್ತಷ್ಟು ಕಾವು ಪಡೆದುಕೊಂಡಿದೆ. ಪೊಲೀಸರ ಕ್ರಮದ ವಿರುದ್ಧ ದೆಹಲಿಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.
ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡದ ಪೊಲೀಸರು
ಗುರುವಾರ ಮಧ್ಯಾಹ್ನ 12 ಗಂಟೆಗೆ ದೆಹಲಿಯ ಮಂಡಿ ಹೌಸ್ ನಿಂದ ಜಂತರ್ ಮಂತರ್ ವರೆಗೂ ಪ್ರತಿಭಟನಾ ಮೆರವಣಿಗೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡಲು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ. ನಿಗದಿತ ಪ್ರದೇಶದಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಮನವಿ ಮಾಡಿಕೊಳ್ಳಲಾಗಿದೆ. ಇದರ ಮಧ್ಯೆ ಪ್ರತಿಭಟನೆಗೆ ಮುಂದಾದ ಜೆಎನ್ ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂದೇ ಕಡೆಯಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ
ದೆಹಲಿಯ ಕೆಂಪುಕೋಟೆ ಬಳಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ನಾಲ್ಕಕ್ಕಿಂತ ಹೆಚ್ಚು ಮಂದಿ ಜೊತೆಯಲ್ಲಿ ಸೇರುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ. ಇದರ ಮಧ್ಯೆ ಸಾವಿರಾರೂ ಪ್ರತಿಭಟನಾನಿರತರು ಕೆಂಪುಕೋಟೆ ಬಳಿ ನೆರೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಸಹಕರಿಸುವಂತೆ ದೆಹಲಿ ಪೊಲೀಸ್ ಪ್ರೋ ಎಂ.ಎಸ್.ರಂಧ್ವಾ ಮನವಿ ಮಾಡಿದ್ದಾರೆ.
ದೆಹಲಿಯ ಮೆಟ್ರೋ ನಿಲ್ದಾಣಗಳೆಲ್ಲ ಬಂದ್ ಬಂದ್
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಹಲವೆಡೆ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಪಟೇಲ್ ಚೌಕ್, ಲೋಕ್ ಕಲ್ಯಾಣ್ ಮಾರ್ಗ್, ಉದ್ಯೋಗ ಭವನ್, ಐಟಿಒ, ಪ್ರಗತಿ ಮೈದಾನ್, ಖಾನ್ ಮಾರ್ಕೆಟ್ ಗಳನ್ನು ಬಂದ್ ಮಾಡಲಾಗಿದೆ. ಇನ್ನೊಂದೆಡೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಜಾಸೋಲಾ ವಿಹಾರ್ ಶಾಹೀನ್ ಬಾಗ್, ಮುನಿರ್ಕಾ, ಲಾಲ್ ಕ್ಯೂಲಾ, ಜಾಮಾ ಮಸೀದ್, ಚಾಂದಿನಿ ಚೌಕ್ ಮತ್ತು ವಿಶ್ವವಿದ್ಯಾಲಯ ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ಈ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ತಡೆ ಹಿಡಿಯಲಾಗಿದೆ.
|
ದೆಹಲಿ ಗುರುಗ್ರಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್
ದೆಹಲಿಯಲ್ಲಿ ಪ್ರತಿಭಟನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹೊರ ರಾಜ್ಯಗಳಿಂದ ಪ್ರತಿಭಟನಾಕಾರರು ಆಗಮಿಸುವ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಗುರುಗ್ರಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಆ ಮೂಲಕ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಮುಂದಾಗಿದ್ದಾರೆ. ಇತ್ತ ಪೊಲೀಸರು ಹಾಕಿರುವ ಬ್ಯಾರಿಕೇಡ್ ನಿಂದಾಗಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.