Breaking: ಸರಕಾರ ಉರುಳಿಸೋ ಯತ್ನ ಆತಂಕ: ಶಾಸಕರ ಜೊತೆ ಕೇಜ್ರಿವಾಲ್ ಸಭೆ
ನವದೆಹಲಿ, ಆಗಸ್ಟ್ 25: ದೆಹಲಿ ಸರಕಾರ ಉರುಳಿಸಲು ಭಾರತೀಯ ಜನತಾ ಪಕ್ಷ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪಗಳ ಬೆನ್ನಲ್ಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಎಲ್ಲಾ ಆಪ್ ಶಾಸಕರ ಜೊತೆಗೆ ಸಭೆ ನಡೆಸಲಿದ್ದಾರೆ.
ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ದಾಳಿಗಳು ನಡೆದ ಹಿನ್ನೆಲೆಯಲ್ಲಿ ಮತ್ತು ಆಮ್ ಆದ್ಮಿ ಪಕ್ಷದ ಮುಂಭಾಗದಲ್ಲಿ ಭಾರತೀಯ ಜನತಾ ಪಕ್ಷದಿಂದ ಬೆದರಿಕೆಗಳು ಮತ್ತು ಲಂಚದ ಆಮಿಷಗಳು ಬರುತ್ತಿರುವ ಆರೋಪಗಳಿವೆ. ಹೀಗಾಗಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇಂದು ತಮ್ಮ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ ಸಭೆ ಕರೆದಿದ್ದಾರೆ.
ಬಿಜೆಪಿ ಸೇರಿದರೆ ಒಬ್ಬರಿಗೆ 20 ಕೋಟಿ, ಮತ್ತೊಬ್ಬರನ್ನು ಕರೆ ತಂದರೆ 25 ಕೋಟಿ!
ಗುರುವಾರ ಬೆಳಗ್ಗೆ 11 ಗಂಟೆ ನಂತರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಯಲಿದೆ. ಪ್ರಸ್ತುತ ರಾಜಕೀಯ ಸನ್ನಿವೇಶ ಮತ್ತು ಪಕ್ಷದ ನಾಯಕರ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಳಿಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.
ಇದಲ್ಲದೆ, ಬಿಜೆಪಿ ತನ್ನ ಪಕ್ಷದ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ರಾಜಕೀಯ ಗದ್ದಲದ ನಡುವೆ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಬುಧವಾರವೂ ಸಿಎಂ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಗೆ ಕರೆದಿದ್ದರು.
ದೆಹಲಿ ಸರ್ಕಾರವನ್ನು ಉರುಳಿಸಲು ಭಾರತೀಯ ಜನತಾ ಪಕ್ಷ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ದೆಹಲಿ ಆಡಳಿತ ಸರ್ಕಾರದ ಹಲವಾರು ಆಪ್ ಪಕ್ಷದ ನಾಯಕರು ಬಹಿರಂಗವಾಗಿ ಟೀಕೆಗಳನ್ನು ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು "ಪತನಗೊಳಿಸಲು" ಭಾರತೀಯ ಜನತಾ ಪಕ್ಷವು ಎಎಪಿ ಶಾಸಕರಿಗೆ 20 ಕೋಟಿ ರೂಪಾಯಿಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
"ಎಎಪಿ ಶಾಸಕರಿಗೆ 20-20 ಕೋಟಿ ರೂಪಾಯಿ ಆಮಿಷವೊಡ್ಡುವ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಮುಂದಾಗಿದೆ" ಎಂದು ಭಾರದ್ವಾಜ್ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.
ಕಳೆದ ಸೋಮವಾರ, ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬಿಟ್ಟು ಭಾರತೀಯ ಜನತಾ ಪಕ್ಷಕ್ಕೆ ಸೇರುವಂತೆ ತನಗೆ ಆಫರ್ ಬಂದಿತ್ತು. ಬಿಜೆಪಿ ಸೇರಿದರೆ ಸಿಬಿಐ, ಇಡಿಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಕೊನೆಗೊಳಿಸುವುದಾಗಿ ತಿಳಿಸಿದ್ದರು ಎಂದು ಆರೋಪಿಸಿದ್ದರು.
ಆದರೆ, ಮನೀಶ್ ಸಿಸೋಡಿಯಾ ಆರೋಪವನ್ನು ಬಿಜೆಪಿ ನಿರಾಕರಿಸಿತ್ತು. ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರ ಭ್ರಷ್ಟಾಚಾರ ಬಹಿರಂಗವಾಗುತ್ತಿರುವುದು ಎಎಪಿಯ ಹತಾಶೆ ಹೊರಬರುತ್ತಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.
ದೆಹಲಿಯಲ್ಲಿ ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸುವುದರ ಮೂಲಕ ಈ ಎಲ್ಲಾ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಆಪ್ ಸರಕಾರ ಪತನಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.
ದೆಹಲಿ ಅಬಕಾರಿ ನೀತಿಯ ಮೇಲೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ. ಸಿಬಿಐ ದಾಖಲಿಸಿದ ಎಫ್ಐಆರ್ನಲ್ಲಿ ಹೆಸರಿಸಲಾದ 15 ಜನರಲ್ಲಿ ಮನೀಶ್ ಸಿಸೋಡಿಯಾ ಕೂಡ ಸೇರಿದ್ದಾರೆ. ಅಬಕಾರಿ ಅಧಿಕಾರಿಗಳು, ಮದ್ಯದ ಕಂಪನಿ ಅಧಿಕಾರಿಗಳು, ಕೆಲವು ಅಪರಿಚಿತ ಸಾರ್ವಜನಿಕ ಅಧಿಕಾರಿಗಳು, ವಿತರಕರು ಮತ್ತು ಖಾಸಗಿ ವ್ಯಕ್ತಿಗಳ ಮೇಲೆಯೂ ಪ್ರಕರಣವನ್ನು ದಾಖಲಿಸಿದ್ದಾರೆ.